– ಮಾಜಿ ಸಿಎಂ ಸಿದ್ದರಾಮಯ್ಯ ಪೇಪರ್ ಟೈಗರ್
– ನನ್ನ ಬಗ್ಗೆ ಮಾತನಾಡಿದವರಿಗೆಲ್ಲ ಬಿಪಿ, ಶುಗರ್ ಬರುತ್ತೆ
ಮೈಸೂರು: ಇಡೀ ದೇಶಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕೆಂಬ ಆಸೆ ಇದೆ. ಹೀಗಾಗಿ ಮೋದಿ ಶಕ್ತಿಯ ಎದುರು ಜೆಡಿಎಸ್ ಹಾಗೂ ಕಾಂಗ್ರೆಸ್ ನುಚ್ಚು ನೂರಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾರೂ ಅಭ್ಯರ್ಥಿ ಆಗಬೇಕೆಂಬುದು ಮುಖ್ಯವಲ್ಲ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎನ್ನುವುದು ನಮ್ಮ ಉದ್ದೇಶ. ಅದೇ ಆಶಯದಿಂದ ಚುನಾವಣೆ ಎದುರಿಸುತ್ತಿದ್ದೇವೆ. ರಾಜ್ಯದಲ್ಲಿ 22 ರಿಂದ 25 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಪ್ರಧಾನಿ ಮೋದಿ ಅಲೆ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಾಗಿದೆ ಎಂದು ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸವಾಲು ಹಾಕಿದ ಕೆ.ಎಸ್.ಈಶ್ವರಪ್ಪ ಅವರು, ನಾನು ಹಿಂದೆಯೂ ಸವಾಲು ಹಾಕಿದ್ದೆ. ಈಗಲೂ ಹಾಕುತ್ತೇನೆ. ಅವರು ಹಿಂದುಳಿದ ವರ್ಗಗಳ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ಪೇಪರ್ ಹುಲಿ. ಅವರಿಗೆ ಪೇಪರ್ ಟೈಗರ್ ಎನ್ನುವ ಪದ ಹೇಳಿ ಮಾಡಿಸಿದಂತಿದೆ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬದಾಮಿ ಹಾಗೂ ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿ. ಎರಡು ಕ್ಷೇತ್ರಗಳ ಪೈಕಿ ಯಾವುದಾದರೂ ಒಂದರಲ್ಲಿ ಅವರು ಗೆದ್ದು ತೋರಿಸಲಿ. ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದರು.
ನನಗೆ ಬಿಪಿ, ಶುಗರ್ ಇಲ್ಲ. ಆದರೆ ನನ್ನ ಬಗ್ಗೆ ಮಾತನಾಡಿದವರಿಗೆಲ್ಲ ಬಿಪಿ, ಶುಗರ್ ಬರುತ್ತದೆ. ನನ್ನ ವಿಚಾರದಲ್ಲಿ ಸಿದ್ದರಾಮಯ್ಯ ಅವರಂತೂ ಪದೇ ಪದೇ ಸಹನೆ ಕಳೆದುಕೊಳ್ಳುತ್ತಿದ್ದಾರೆ. ಯಾಕೆ ಸಹನೆ ಕಳೆದುಕೊಳ್ಳುತ್ತಾರೆ ಅಂತ ಅವರನ್ನೇ ಕೇಳಬೇಕು ಎಂದು ಕೆ.ಎಸ್.ಈಶ್ವರಪ್ಪ ಅವರು, ಮಾಜಿ ಸಿಎಂ ವಿರುದ್ಧ ಹರಿಹಾಯ್ದರು.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕ್ಷಮೆ ಕೇಳುವುದಕ್ಕೆ ಬರೋದಿಲ್ವಾ? ಜೆಡಿಎಸ್ನವರು ತೆನೆ ಹೊತ್ತ ಮಹಿಳೆ ಚಿಹ್ನೆ ಹೊಂದಿದ್ದಾರೆ. ಆದರೆ ಸಚಿವರು ನೀಡುತ್ತಿರುವ ಹೇಳಿಕೆಗಳು ಮಹಿಳೆಯರಿಗೆ ಗೌರವ ತರುತ್ತಿಲ್ಲ. ಸುಮಲತಾ ಅಂಬರೀಶ್ ಅವರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದ್ದಾರೆ. ಸಚಿವ ರೇವಣ್ಣ ಇದುವರೆಗೂ ಕ್ಷಮೆ ಕೇಳಿಲ್ಲ. ಅವರ ಬದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಎಲ್ಲರೂ ಕ್ಷಮೆ ಕೇಳಿದ್ದಾರೆ ಎಂದು ಕಿಡಿಕಾರಿದರು.
ಸಚಿವ ಎಚ್.ಡಿ.ರೇವಣ್ಣ ಅವರಿಂದ ಈ ಕೂಡಲೇ ಕ್ಷಮೆ ಕೇಳಿಸಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಲ್ಲಿ ನಾನು ಆಗ್ರಹಿಸುತ್ತೇನೆ. ಇಲ್ಲವಾದರೆ ನಿಮ್ಮ ಪಕ್ಷದ ಚಿಹ್ನೆಯನ್ನು ಬದಲಾಯಿಸಿ. ಯಾವುದಾದರೂ ಪ್ರಾಣಿಯ ಚಿಹ್ನೆ ಇಟ್ಟುಕೊಂಡು ಚುನಾವಣೆ ಎದುರಿಸಿ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv