ಹಾಸನ: ಜಿಲ್ಲೆಯ ರಣಕಣ ಇಂದಿನಿಂದ ಮತ್ತಷ್ಟು ಕಾವೇರಲಿದೆ. ಹೊಳೆನರಸೀಪುರದ ಮೂಡಲಹಿಪ್ಪೆ ಮತ್ತು ಪಡವಲಹಿಪ್ಪೇ ಗ್ರಾಮಗಳಲ್ಲಿ ಪೂಜೆ ಸಲ್ಲಿಸಿದ ನಂತರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಸಂಭಾವ್ಯ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ಗೆ ತಾಯಿ ಭವಾನಿ ಸಾಥ್ ನೀಡಲಿದ್ದಾರೆ.
ಮತ್ತೊಂದೆಡೆ ಮಾಜಿ ಸಚಿವ ಎ.ಮಂಜು ಇಂದು ಬಿಜೆಪಿ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಈಗಾಗಲೇ ಬಿಎಸ್ವೈರನ್ನು ಹಲವು ಬಾರಿ ಭೇಟಿಯಾಗಿರುವ ಎ.ಮಂಜು ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ತಮ್ಮ ಬೆಂಬಲಿಗರಿಗೂ ಸೂಚಿಸಿದ್ದಾರೆ ಎನ್ನಲಾಗ್ತಿದೆ.
ಅಲ್ಲದೆ ಹಾಸನದ ಖಾಸಗಿ ಹೋಟೆಲ್ ನಲ್ಲಿ ಸೋಮವಾರವಷ್ಟೇ ಸಭೆ ನಡೆಸಿರುವ ಮಂಜು, ತಮ್ಮ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟಿನಿಂದ ಕೆಲಸ ಮಾಡಲು ಸಲಹೆ ನೀಡಿದ್ದಾರೆ. ಜೆಡಿಎಸ್ ವಿರುದ್ಧ ಸಂಘಟಿತ ಹೋರಾಟ ನಡೆಸಲು ಕಾರ್ಯಕರ್ತರೊಂದಿಗೆ ಚರ್ಚಿಸಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.
ಒಟ್ಟಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುವ ಜಿದ್ದಾಜಿದ್ದಿ ಕ್ಷೇತ್ರವಾಗಿ ಹಾಸನ ಮಾರ್ಪಟ್ಟಿದೆ. ಕಾಂಗ್ರೆಸ್ಸಿನ ಮತ್ತೊಬ್ಬ ನಾಯಕ ಬಾಗೂರು ಮಂಜೇಗೌಡ ಕೂಡ ಎ.ಮಂಜುಗೆ ಜೊತೆ ಸೇರಿಕೊಳ್ಳುವ ಸಾಧ್ಯತೆಗಳಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv