– ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಗೆಲ್ಲುತ್ತಾರೆ
ಬೆಂಗಳೂರು: ನಾವು ಮೈತ್ರಿ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಬಾಂಬ್ ಇಟ್ಟಿದ್ದಾರೆ. ಅದು ಯಾವಾಗ ಸ್ಫೋಟವಾಗುತ್ತದೆ ಅಂತ ಅವರೇ ಹೇಳಬೇಕು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23ರ ನಂತರ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಮೈತ್ರಿ ಸರ್ಕಾರ ಬಿದ್ದರೆ ನಾವು ಕಾರಣರಲ್ಲ. ಸಿದ್ದರಾಮಯ್ಯ ಅವರೇ ಕಾರಣವಾಗುತ್ತಾರೆ. ನಾವಾಗಿಯೇ ಸಮ್ಮಿಶ್ರ ಸರ್ಕಾರ ಬೀಳಿಸಲು ಹೋಗುವುದಿಲ್ಲ ಎಂದರು.
ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲ್ಲುತ್ತಾರೆ. ಸಿಎಂ ಕುಮಾರಸ್ವಾಮಿ ಅವರು ಭಯ ಬಿದ್ದು ಪುತ್ರ ನಿಖಿಲ್ ಪರ 6 ದಿನಗಳ ಕಾಲ ಮಂಡ್ಯದಲ್ಲಿ ಪ್ರಚಾರ ಮಾಡಿದರು. ಅವರ ಮಾತಿನಲ್ಲಿ ಸೋಲು ಕಾಣುತ್ತಿದೆ. ಸುಮಲತಾ ಅವರು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿಯೂ ಬಿಜೆಪಿ ಗೆಲ್ಲುವ ವಾತಾವರಣವಿದೆ. ತುಮಕೂರಿನಲ್ಲಿ ನಮ್ಮ ಅಭ್ಯರ್ಥಿಯೇ ಜಯ ಗಳಿಸುತ್ತಾರೆ. ಈ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಳ ಜಗಳ ನಮಗೆ ಅನುಕೂಲವಾಯಿತು. ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಂಗಳೂರಿನ ನಾಲ್ಕೂ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.