ನವದೆಹಲಿ: ಭಾರತದ ಜೊತೆಗೆ ಕಾಶ್ಮೀರ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದದ ಬಗ್ಗೆ ಮಾತುಕತೆ ನಡೆಸಲು ಪಾಕ್ ಸಿದ್ಧ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕಿರ್ಗಿಸ್ತಾನದ ಬೆಶ್ಕೆಕ್ನಲ್ಲಿ ಜೂನ್ 13 ಮತ್ತು 14 ರಂದು ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗ ಸಭೆ ನಡೆಯಲಿದ್ದು, ಈ ವೇಳೆ ಪಾಕ್ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ ಬೆನ್ನಲ್ಲೇ ಇಮ್ರಾನ್ ಖಾನ್ ಪತ್ರ ಬರೆದಿದ್ದಾರೆ.
ಮೂಲಗಳ ಪ್ರಕಾರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿದ್ದಕ್ಕೆ ಬರೆದ ಅಭಿನಂದನಾ ಪತ್ರದಲ್ಲಿ, ಎರಡು ದೇಶಗಳು ಬಡತನದಿಂದ ಮುಕ್ತಿಯಗಬೇಕು ಎಂದರೆ ನಾವು ಪರಸ್ಪರ ಮಾತುಕತೆ ನಡೆಸುವುದೊಂದೆ ಪರಿಹಾರ. ಪ್ರಾದೇಶಿಕ ಅಭಿವೃದ್ಧಿಗಾಗಿ ಎರಡು ದೇಶಗಳು ಒಟ್ಟಿಗೆ ಕೆಲಸ ಮಾಡುವುದು ಮುಖ್ಯ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೇ ಇರುವ ಕಾಶ್ಮೀರ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಶಾಂತಿಯುತ ಮಾತುಕತೆಯನ್ನು ಪಾಕಿಸ್ತಾನ ಬಯಸುತ್ತದೆ. ನಾವು ಜನರ ಸುಧಾರಣೆಗೋಸ್ಕರ ಭಾರತದೊಂದಿಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಇಮ್ರಾನ್ ಖಾನ್ ಅವರು ಹೇಳಿದ್ದಾರೆ.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ವಾಯುಸೇನೆ ಬಾಂಬ್ ದಾಳಿ ನಡೆಸಿದ ಬಳಿಕ ಎರಡು ದೇಶಗಳ ಗಡಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿತ್ತು.
ಮೋದಿ ಅವರು ಭಾರತ ದೇಶಾದ್ಯಂತ ಪ್ರಚಂಡ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಬಳಿಕ ಮೋದಿ ಅವರನ್ನು ಅಭಿನಂದಿಸಿದ್ದ ಇಮ್ರಾನ್ ಖಾನ್ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಭಾರತದ ಜೊತೆ ಕೆಲಸ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು.