ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೆ ‘ಆಪರೇಷನ್’

Public TV
2 Min Read
CM Kamal Nath

ಭೋಪಾಲ್: ಮಧ್ಯಪ್ರದೇಶದಲ್ಲಿ ಕಮಲ್‍ನಾಥ್ ನೇತೃತ್ವದ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿದ್ದ ಕಮಲಪಡೆಗೆ ಕಾಂಗ್ರೆಸ್ ಘರ್ ವಾಪಸಿ ಶಾಕ್ ಕೊಟ್ಟಿದೆ.

ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಬುಧವಾರ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರಿಬ್ಬರು ಕ್ರಿಮಿನಲ್ ಅಪರಾಧ ತಿದ್ದುಪಡಿ ತರಲು ಬೆಂಬಲ ನೀಡುವ ಮಸೂದೆಯ ಪರ ಮತವನ್ನು ಹಾಕಿ ಶಾಕ್ ನೀಡಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಿದ ಶಾಸಕರ ಪೈಕಿ ಒಬ್ಬರಾದ ನಾರಾಯಣ್ ತ್ರಿಪಾಠಿ ಅವರು, ಇದು ನನ್ನ ಘರ್ ವಾಪಸಿ ಎಂದು ಘೋಷಿಸಿದ್ದಾರೆ.

ಕಮಲ್‍ನಾಥ್ ನೇತೃತ್ವದ ಸರ್ಕಾರವು ವಿಶ್ವಾಸಮತ ಕಳೆದುಕೊಳ್ಳಲಿದೆ ಎಂದು ವಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಅವರು ಹೇಳಿದ್ದರು. ಆದರೆ ಈಗ ಎಲ್ಲವೂ ತಲೆ ಕೆಳಗಾಗಿದ್ದು, ಕಾಂಗ್ರೆಸ್ ಮತ್ತೆ ಎರಡು ಸಂಖ್ಯಾಬಲ ಸಿಕ್ಕಂತಾಗಿದೆ.

 

ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣ್ ತ್ರಿಪಾಠಿ ಅವರು 2014 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಈಗ ಮರಳಿ ಕಾಂಗ್ರೆಸ್ ಗೂಡು ಸೇರಿಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲದೆ ಕಮಲ್‍ನಾಥ್ ಸರ್ಕಾರದ ಮಸೂದೆಯನ್ನು ಬೆಂಬಲಿಸಿದ ಮತ್ತೊಬ್ಬ ಬಿಜೆಪಿ ಶಾಸಕ ಶರದ್ ಕೋಲ್ ಎಂದು ತಿಳಿಸಿದ್ದಾರೆ.

ನನ್ನ ರಾಜಕೀಯ ಭವಿಷ್ಯವನ್ನು ಹಾಳು ಮಾಡಲು ಬಿಜೆಪಿಯಲ್ಲಿ ಪ್ರಯತ್ನಗಳು ನಡೆದಿವೆ. ಅಷ್ಟೇ ಅಲ್ಲದೆ ಮಾಜಿ ಸಿಎಂ ಶಿವರಾಜ್ ಚೌಹಾಣ್ ನೇತೃತ್ವದ ಸರ್ಕಾರವು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ನನ್ನ ಕ್ಷೇತ್ರವಾದ ಮೈಹಾರ್ ನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಕಮಲ್‍ನಾಥ್ ಅವರು, ನಮ್ಮ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುತ್ತದೆ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇರುವುದರಿಂದ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಬಿಜೆಪಿಯ ಇಬ್ಬರು ಶಾಸಕರು ನಮಗೆ ಬೆಂಬಲ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಪ್ರಸ್ತುತ 230 ಸದಸ್ಯರನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಪರ ಸ್ಪೀಕರ್ ಸೇರಿ 121 ಶಾಸಕರ ಬಲವನ್ನು ಹೊಂದಿದೆ.

ಇದಕ್ಕೂ ಮುನ್ನ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ವಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಅವರು, ಪಕ್ಷದ ನಂಬರ್ 1 ಮತ್ತು ನಂಬರ್ 2 ವ್ಯಕ್ತಿಗಳಿಂದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಆದೇಶ ಬಂದಲ್ಲಿ 24 ಗಂಟೆಯ ಒಳಗಡೆ ಕಮಲ್‍ನಾಥ್ ಸರ್ಕಾರ ಬೀಳಲಿದೆ ಎಂದು ಹೇಳಿದ್ದರು.

ಕಮಲ್‍ನಾಥ್ ಸರ್ಕಾರವನ್ನು ಬೀಳಿಸಲು ನಾವು ಕಾಯುತ್ತಿದ್ದೇವೆ. ಮಧ್ಯಪ್ರದೇಶದ ಪರಿಸ್ಥಿತಿ ಕರ್ನಾಟಕಕ್ಕಿಂತ ಅತ್ಯಂತ ಕೆಟ್ಟದಾಗಿದೆ. ಇಲ್ಲಿನ ಸರ್ಕಾರವು ಏಳು ತಿಂಗಳು ಪೂರ್ಣಗೊಳಿಸಿದ್ದೆ ಆಶ್ಚರ್ಯಕರ ಹಾಗೂ ಇಲ್ಲಿಗೆ ಕಮಲ್‍ನಾಥ್ ಆಡಳಿತವನ್ನು ನಿಲ್ಲಿಸಬೇಕಿದೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ನಾವು ಸರ್ಕಾರ ರಚನೆಯ ಆತುರದಲ್ಲಿ ಇರಲಿಲ್ಲ. ಆದರೆ ಇಂದಿನ ಪರಿಸ್ಥಿತಿ ನಮಗೆ ಅನುಕೂಲವಾಗಿದೆ ಎಂದು ತಿಳಿಸಿದ್ದರು.

Gopal Bhargava Kamal Nath

ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಚಿಂದ್ವಾರಾ ಕ್ಷೇತ್ರದಿಂದ ಸಿಎಂ ಕಮಲ್‍ನಾಥ್ ಪುತ್ರ ನಕುಲ್ ನಾಥ್ ಜಯಗಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *