– ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ
ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಸೈನ್ಯವನ್ನು ಬಲಪಡಿಸಲಾಗಿದ್ದು, 10 ಸಾವಿರಕ್ಕೂ ಅಧಿಕ ಅರೆಸೇನಾ ಪಡೆಯ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸುವ ಮೂಲಕ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಕಾಶ್ಮೀರ ಕಣಿವೆಯ ಎರಡು ದಿನಗಳ ಭೇಟಿಯಿಂದ ಹಿಂದಿರುಗಿದ ನಂತರ ಈ ನಿರ್ಧಾರ ಕೈಗೊಂಡಿದ್ದು, ಸೈನ್ಯವನ್ನು ಕಳುಹಿಸುವ ಕುರಿತು ನಿರ್ಧರಿಸಲಾಗಿದೆ. ದೋವಲ್ ಅವರು ಕಾಶ್ಮೀರ ಕಣಿವೆಗೆ ಭೇಟಿ ನೀಡಿದ ವೇಳೆ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಗತಿ ಕುರಿತು ವಿವರ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಡಿಜಿ ದಿಲ್ಬಾಗ್ ಸಿಂಗ್ ಅವರು ಈ ಕುರಿತು ಮಾಹಿತಿ ನೀಡಿ, 10 ಸಾವಿರ ಅರೆ ಸೇನಾ ಪಡೆಯನ್ನು ಉತ್ತರ ಕಾಶ್ಮೀರ ಭಾಗಕ್ಕೆ ನಿಯೋಜನೆಗೊಳಿಸುವಂತೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದಕರ ದಾಳಿಗೆ ಪ್ರತಿದಾಳಿ ನಡೆಸಲು ಹಾಗೂ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಸೇನಾ ಪಡೆಯನ್ನು ನಿಯೋಜಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ದೇಶದ ವಿವಿಧ ಭಾಗಗಳಲ್ಲಿರುವ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಕಾಶ್ಮೀರದಲ್ಲಿ ಸೈನಿಕರ ಕೊರತೆ ಇದ್ದು, ಹೀಗಾಗಿ ನಮಗೆ ಹೆಚ್ಚುವರಿ ಸೈನ್ಯದ ಅಗತ್ಯವಿದೆ. ಈ ಹಿಂದೆ 100 ಕಂಪನಿಗಳನ್ನು ಸಾಗಿಸಲಾಗಿದ್ದು, ಅದನ್ನೇ ನಾವು ಮರಳಿ ಕೇಳಿದ್ದೇವೆ ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ. ಒಂದು ಕಂಪನಿ 100 ಸೈನಿಕರನ್ನು ಒಳಗೊಂಡಿರುತ್ತದೆ.
ಇತ್ತೀಚೆಗೆ ಅಮರನಾಥ ಯಾತ್ರೆಯ ಭದ್ರತೆಗಾಗಿ ಹೆಚ್ಚುವರಿಯಾಗಿ ಸುಮಾರು 40 ಸಾವಿರ ಕೇಂದ್ರ ಅರೆಸೈನಿಕ ಪಡೆಗಳನ್ನು ಕಳುಹಿಸಲಾಗಿದೆ. ಫೆ.24ರಂದು ಕೇಂದ್ರ ಅರೆಸೈನಿಕ ಪಡೆಯ ಸುಮಾರು 100 ಕಂಪನಿಗಳನ್ನು ಕಣಿವೆ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಗೆ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು.
ಇದಾದ ನಂತರ ಜಮಾತ್-ಇ-ಇಸ್ಲಾಮಿ ಮೇಲೆ ನಿಷೇಧ ಹೇರಲಾಯಿತು. ರಾಜ್ಯದ ನಾಯಕರು ಮತ್ತು ಬೆಂಬಲಿಗರ ಮೇಲೆ ಹೆಚ್ಚು ದಬ್ಬಾಳಿಕೆಗಳು ನಡೆದಿವೆ ಎಂದು ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.