ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ನಂತರ ಉಗ್ರ ಸಂಘಟನೆಗಳು ತಮ್ಮ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಆರ್ಥಿಕ ಚಟುವಟಿಕೆ ಹೆಚ್ಚು ನಡೆಯುವ ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿವೆ.
ಪಾಕಿಸ್ತಾನ ಮೂಲಕ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ. ಮಾತ್ರವಲ್ಲದೆ, ಭಾರತದ ಆರ್ಥಿಕತೆಯನ್ನು ಕುಗ್ಗಿಸುವ ಪ್ರಯತ್ನವನ್ನು ನಡೆಸುತ್ತಿದ್ದು, ಇದರ ಭಾಗವಾಗಿ ಮುಂಬೈನಂತಹ ವಾಣಿಜ್ಯ ನಗರಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದುಕೊಂಡಿರುವ ಭಾರತದ ನಿರ್ಧಾರ ‘ಪುಲ್ವಾಮಾದಂತಹ ಘಟನೆ’ಗಳಿಗೆ ಕಾರಣವಾಗಬಹುದು. ಅಲ್ಲದೆ, ಭಾರತ ಮತ್ತು ಪಾಕಿಸ್ತಾನದ ನಡುವೆ ಸಾಂಪ್ರದಾಯಿಕ ಯುದ್ಧವನ್ನು ಪ್ರಚೋದಿಸುತ್ತದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಯ ಬೆನ್ನಲ್ಲೇ ಈ ಮಾಹಿತಿ ಹೊರ ಬಿದ್ದಿದೆ.
ಈ ಮೂಲಕ ಪಾಕಿಸ್ತಾನ ಭಯೋತ್ಪಾದಕ ಗುಂಪುಗಳಿಗೆ ಬೆಂಬಲವನ್ನು ಹೆಚ್ಚಿಸುತ್ತಿದೆ. ಅಲ್ಲದೆ ಪಾಕಿಸ್ತಾನದ ಬಳಿ ಇರುವ ಭಯೋತ್ಪಾದಕ ಗುಂಪುಗಳನ್ನು ಭಾರತದತ್ತ ಕಳುಹಿಸುತ್ತಿದೆ ಎಂಬ ಸೂಚನೆಯಾಗಿ ಈ ಮಾಹಿತಿ ಗೋಚರಿಸುತ್ತಿದೆ.
ಇಮ್ರಾನ್ ಖಾನ್ ಹೇಳಿಕೆ ನೀಡುವ ವೇಳೆ ಜೈಶ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಕಿರಿಯ ಸಹೋದರ ರೌಫ್ ಅಝರ್ ನಿನ್ನೆ ರಾವಲ್ಪಿಂಡಿಯಲ್ಲಿ ನಡೆದ ಸಭೆ ನಡೆಸಿದ್ದಾನೆ. ಸಭೆ ಬಳಿಕ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ತೆರಳಿದ್ದಾನೆ ಎಂಬ ಸುದ್ದಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ದಾಳಿ ಕುರಿತು ಚರ್ಚಿಸಲಾಗಿದೆ ಎಂದು ಗುಪ್ತಚರ ದಳ ಮಾಹಿತಿ ನೀಡಿದೆ.