ಬೆಂಗಳೂರು: ನನಗೆ ಸಂಬಂಧ ಇಲ್ಲ ವಿಷಯವಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ನಾನು ಪ್ರತಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಒಕ್ಕಲಿಗರ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ನಾನು ಮಾತನಾಡಲ್ಲ. ಅದು ನನಗೆ ಸಂಬಂಧ ಇಲ್ಲದ ವಿಷಯ. ದೇಶದಲ್ಲಿ ಕಾನೂನು ಕ್ರಮಗಳು ನಡೆಯುತ್ತಿರುತ್ತವೆ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.
ಇಂದು ಡಿಸಿಎಂ ಅವರು ನೆಲಮಂಗಲಕ್ಕೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ವರ್ಗಕ್ಕೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ವಿದ್ಯಾರ್ಥಿ ನಿಲಯದ ಸ್ವಚ್ಛತೆ, ಊಟ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಣೆ ನಡೆಸಿದರು.
ವಿಶೇಷವೆಂದರೆ ನೆಲಮಂಗಲ ತಾಲೂಕು ಮಟ್ಟದ ಯಾವೊಬ್ಬ ಅಧಿಕಾರಿಗೂ ಮಾಹಿತಿ ನೀಡದೆ ದಿಢೀರ್ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಕಸ ನಿರ್ವಹಣೆಯಲ್ಲಿ ನೆಲಮಂಗಲ ಪುರಸಭೆ ವೈಫಲ್ಯವನ್ನು ಕಂಡ ಡಿಸಿಎಂ, ಪುರಸಭೆ ಅಧಿಕಾರಿಗಳ ಕಾರ್ಯ ವೈಖರಿಗೆ ಡಿಸಿಎಂ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸುದ್ದಾರೆ.