ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಎನ್ ಅಚ್ಚಮನಹಳ್ಳಿಯಲ್ಲಿ ಸರ್ಕಾರಿ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ.
ಅಚ್ಚಮನಹಳ್ಳಿಯ ಶಾಲೆಯಲ್ಲಿಯೇ ಇಡೀ ರಾತ್ರಿ ಕಳೆದ ಸಚಿವರು, ಅಲ್ಲಿನ ಮಕ್ಕಳ ಹಾಗೂ ಶಿಕ್ಷಕರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಭರವಸೆ ನೀಡಿದ್ದಾರೆ. ತಿರುಮಣಿಯಲ್ಲಿ ಸೋಲಾರ್ ಪ್ಲಾಂಟ್ಗೆ ಜಾಗ ಕೊಟ್ಟರೂ ಅಚ್ಚಮನಹಳ್ಳಿಯ ಗ್ರಾಮದಲ್ಲಿ ವಿದ್ಯುತ್ ಕೊರತೆ ಇದೆ. ಅಲ್ಲದೆ ಲೋಡ್ ಶೆಡ್ಡಿಂಗ್ನಿಂದಾಗಿ ನಮಗೆ ಇಲ್ಲಿ ಓದೋಕೆ ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಕೂಡ ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
ಇದರ ಜೊತೆಗೆ ಗ್ರಾಮಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ ಇಲ್ಲದೇ ಈ ಭಾಗದ ಜನ ಕಷ್ಟಪಡುತ್ತಿದ್ದಾರೆ. ರಸ್ತೆ ಮತ್ತು ಬಸ್ ವ್ಯವಸ್ಥೆ ಕೂಡ ಇಲ್ಲದ ಕಾರಣಕ್ಕೆ ಶಾಲೆಗೆ ಹೋಗಲು ಕಷ್ಟವಾಗುತ್ತಿದೆ. ಶಾಲೆಯಲ್ಲಿ ಶಿಕ್ಷಕರ ಕೊರತೆ ಕೂಡ ಇದೆ ಎಂದು ವಿದ್ಯಾರ್ಥಿಗಳು ಸಚಿವರ ಬಳಿ ತಮ್ಮ ಅಳಲನ್ನು ತೋಡಿಕೊಂಡರು. ಸಮಸ್ಯೆಗಳನ್ನು ಆಲಿಸಿದ ಸಚಿವ ಸುರೇಶ್ ಕುಮಾರ್ ಅದನ್ನೆಲ್ಲ ಬಗೆಹರಿಸುವ ಭರವಸೆ ನೀಡಿದರು.