– ಅನರ್ಹರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲ್ಲ
ಚಿಕ್ಕೋಡಿ(ಬೆಳಗಾವಿ): ಅನರ್ಹ ಶಾಸಕರ ದಾರಿ ಅವರಿಗೆ ನಮ್ಮ ದಾರಿ ನಮಗೆ ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ ಕತ್ತಿ ಅನರ್ಹ ಶಾಸಕರಿಗೆ ಮಾತಿನ ಮೂಲಕ ತಿವಿದಿದ್ದಾರೆ.
ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹಿರೇಮಠದಿಂದ ಆಯೋಜಿಸಿದ್ದ ದಸರಾ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಅವರು, ಬೆಳಗಾವಿ ಜಿಲ್ಲೆಯ ಮೂವರು ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೆ ಟಿಕೆಟ್ ಸಿಗುತ್ತದೆ. ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೂ ಟಿಕೆಟ್ ಸಿಗುವುದಿಲ್ಲ. ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆಗೆ ಟಿಕೆಟ್ ಸಿಗುವುದು ಫಿಕ್ಸ್. ರಾಜು ಕಾಗೆ ಬಿಜೆಪಿ ಪಕ್ಷ ಬಿಡುವುದಿಲ್ಲ ಅವರಿಗೆ ಉಪ ಚುನಾವಣೆಯ ಟಿಕೆಟ್ ಸಿಗುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
ಅನರ್ಹ ಶಾಸಕ ಶ್ರೀಮಂತ ಪಾಟೀಲ ಪರಿಸ್ಥಿತಿ ಏನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದು ಉತ್ತರಿಸಿದರು.
ಒಂದೆಡೆ ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಅನರ್ಹ ಶಾಸಕರು ಅಳಿಯಂದಿರಿದ್ದಂತೆ. ಬಿಜೆಪಿ ಅಧಿಕಾರಕ್ಕೆ ಬರಲು ಅವರೇ ಕಾರಣ. ಸುಪ್ರೀಂ ಕೋರ್ಟ್ ಅವಕಾಶ ನೀಡಿದಲ್ಲಿ ಉಪಚುನಾವಣೆಯಲ್ಲಿ ಅವರೇ ಸ್ಪರ್ಧಿಸುತ್ತಾರೆ. ಇಲ್ಲವಾದರೆ ಅವರು ಸೂಚಿಸಿದವರಿಗೆ ಟಿಕೆಟ್ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದರೆ ಬಿಜೆಪಿಯ ಕೆಲ ಶಾಸಕರು ಹಾಗೂ ಕಾರ್ಯಕರ್ತರು ಅನರ್ಹ ಶಾಸಕರು ಪಕ್ಷ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕತ್ತಿ ಸಹ ಇಂದು ಅನರ್ಹರಿಗೆ ತಿವಿದಿದ್ದಾರೆ.