– ಕಾಂಗ್ರೆಸ್, ಜೆಡಿಎಸ್ನವರಿಗೆ ಬುದ್ಧಿ ಭ್ರಮಣೆಯಾಗಿದೆ
– ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು
ದಾವಣಗೆರೆ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಡೊಳ್ಳಿನ ದಾನಕ್ಕೆ ಸಖತ್ ಸ್ಟೆಪ್ ಹಾಕಿದ್ದಾರೆ.
ನಗರದ ಕಾಳಿಕಾದೇವಿ ರಸ್ತೆಯಲ್ಲಿ ವಿಜಯದಶಮಿ ಮೆರವಣಿಗೆ ಹೊರಟಿತ್ತು. ಈ ವೇಳೆ ರೇಣುಕಾಚಾರ್ಯ ಅವರು ಡೊಳ್ಳು ಕುಣಿತ ಮೇಳದ ಜೊತೆಗೆ ಸೇರಿ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಶಾಸಕರು ಮೆರವಣಿಗೆಯಲ್ಲಿ ಸೇರಿದ್ದ ಬೆಂಬಲಿಗರು, ಯುವಕರನ್ನು ಹುರಿದುಂಬಿಸಿದರು.
ಇದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ಯಾವುದೇ ಕಾರಣಕ್ಕೂ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಸೈಡ್ಲೈನ್ ಮಾಡುವುದಕ್ಕೆ ಸಾಧ್ಯವಿಲ್ಲ. ಪ್ರತಿಪಕ್ಷಗಳಿಗೆ ಕೆಲಸವಿಲ್ಲ. ಹೀಗಾಗಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿ ನಮ್ಮ ಪಕ್ಷದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೂರುವರೆ ವರ್ಷಗಳ ಕಾಲ ಅವರೇ ನಮ್ಮ ಸಿಎಂ ಎಂದು ಹೇಳಿದರು.
ಮಧ್ಯಂತರ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ಕಾಂಗ್ರೆಸ್ ಹಾಗೂ ಜೆಡಿಎಸ್ನವರಿಗೆ ಬುದ್ಧಿ ಭ್ರಮಣೆಯಾಗಿದೆ. ಬಿಜೆಪಿ ಸರ್ಕಾರದ ಕೆಲಸ ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೆ ಗೆಲ್ಲುತ್ತಾರೆ. ವಿಪಕ್ಷಗಳು ಮೊಸರಿನಲ್ಲಿ ಕಲ್ಲು ಹುಡುಕವ ಕೆಲಸ ಮಾಡುತ್ತಿದ್ದಾರೆ. ಅನರ್ಹ ಕ್ಷೇತ್ರದಲ್ಲಿ ಶಾಸಕರಿಲ್ಲಾ ಎಂಬ ಕಾರಣಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದಾರೆ. ಯಾವುದೇ ರೀತಿಯ ಮಲತಾಯಿ ಧೋರಣೆಯನ್ನು ಸಿಎಂ ಯಡಿಯೂರಪ್ಪ ಮಾಡಿಲ್ಲ ಎಂದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇಡಿನ ರಾಜಕಾರಣದಿಂದ 17 ಜನ ಶಾಸಕರನ್ನು ಅನರ್ಹಗೊಳಿಸಿದರು. ಅಲ್ಲಿ ಶಾಸಕರಿಲ್ಲ, ಹಾಗಾಗಿ ಹೆಚ್ಚಿಗೆ ಅನುಧಾನ ಬಿಡುಗಡೆ ಮಾಡಲಾಗಿದೆ. ಇದಲ್ಲಿ ತಪ್ಪೇನು? ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಗಿದೆ. ಹೈಕಮಾಂಡ್ಗೂ ರಾಜ್ಯದ ಕಾಂಗ್ರೆಸ್ಗೂ ಹೊಂದಾಣಿಕೆ ಇಲ್ಲ. ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ಗುಡುಗಿದರು.