ಹುಬ್ಬಳಿ: ಕಾಂಗ್ರೆಸ್ಸಿನವರು 60-70 ವರ್ಷಗಳ ಕಾಲ ದೇಶವನ್ನು ದರೋಡೆ ಮಾಡಿದ್ದಾರೆ. ಅದೆಲ್ಲವೂ ಈಗ ಬಯಲಿಗೆ ಬರುತ್ತಾ ಇದೆ ಎಂದು ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೈ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಶೆಟ್ಟರ್, ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಶಾಸಕರು ಅಸಮಧಾನಗೊಂಡಿದ್ದಾರೆ. ಶನಿವಾರ ಹಲವು ಶಾಸಕರು ಹೊರಟ್ಟಿಯವರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಜೆಡಿಎಸ್ ಶಾಸಕರು ಅಸಮಧಾನಗೊಂಡು ಮುಂದಿನ ತೀರ್ಮಾನ ಕೈಗೊಳ್ಳಲು ರೆಡಿಯಾಗಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಐಟಿ ದಾಳಿ ಬಗ್ಗೆ ನಾನು ಏನೂ ಹೇಳಲ್ಲ. ಪರಮೇಶ್ವರ್ ಸಹ ರಾಜಕೀಯ ಪ್ರೇರಿತವಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ಸಿನವರು ಐಟಿ ದಾಳಿ ವಿಚಾರದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಾ ಇದ್ದಾರೆ. ರಮೇಶ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಯುತ್ತಿದೆ. ಮುಂದೆ ಎಲ್ಲವೂ ಬಯಲಿಗೆ ಬರಲಿದೆ ಎಂದು ಹೇಳುವ ಮೂಲಕ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳಿದ ಕೈ ನಾಯಕರಿಗೆ ತಿರುಗೇಟು ನೀಡಿದರು.