ಕೋಲಾರ: ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂದಕ್ಕೆ ಪಡೆದಿದೆ.
ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸದ್ಯ ನಿರಾಳವಾಗಿದ್ದು, ಕೆಪಿಸಿಸಿ ಗೆ ಕ್ಷಮಾಪಣೆ ಪತ್ರ ರವಾನಿಸಿದ್ದಾರೆ. ಪತ್ರಿಕಾಗೋಷ್ಠಿಯ ಕುರಿತು ಲಿಖಿತ ಸಮಜಾಯಿಷಿ ನೀಡಿ ಕ್ಷಮೆ ಕೋರಿದ ಹಿನ್ನೆಲೆ ಆರು ಜನ ಕೈ ಮುಖಂಡರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಪ್ರಧಾನ ಕಾರ್ಯದರ್ಶಿಗಳಾದ ಅಮಾನದು ಆದೇಶವನ್ನು ಘೋರ್ಪಡೆ ಅವರು ಹಿಂಪಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಕೆಲ ಶಾಸಕರು ಹಾಗೂ ಮುಖಂಡರು ಕೆ.ಎಚ್.ಮುನಿಯಪ್ಪ ವಿರುದ್ಧ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧವಾಗಿ ಕೆಲಸ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅ.17 ರಂದು ಕೈ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದರು.
ಪಕ್ಷ ವಿರೋಧಿಗಳನ್ನು ಕಾಪಾಡಲು ಕೆ.ಸಿ ವೇಣುಗೋಪಾಲ್ ಪ್ರಯತ್ನ ಮಾಡಿದ್ದಾರೆ ಎಂದು ಆರೋಪ ಮಾಡಿ ಕಾಂಗ್ರೆಸ್ನ ಹಿರಿಯ ನಾಯಕರ ವಿರುದ್ಧ ನಗರಸಭೆ ಮಾಜಿ ಅಧ್ಯಕ್ಷ ಖಲೀಲ್ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಅವರು ಏಳು ಜನ ಕೈ ಮುಖಂಡರನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದರು. ಇದೀಗ ನಗರ ಸಭೆ ಮಾಜಿ ಅಧ್ಯಕ್ಷ ಖಲೀಲ್ ಹೊರತುಪಡಿಸಿ ಆರು ಮಂದಿ ಕೈ ಮುಖಂಡರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.