ಉದ್ವೇಗಕ್ಕೆ ಒಳಗಾಗ್ಬೇಡಿ, ವಿಜೃಂಭಿಸಬೇಡಿ: ಸಿಎಂ ಮನವಿ

Public TV
2 Min Read
BSY 1

– ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ- ಹೆಚ್‍ಡಿಕೆ

ಬೆಂಗಳೂರು: ಅಯೋಧ್ಯೆ ತೀರ್ಪು ಇಂದು ಹೊರಬಿದ್ದಿದ್ದು, ದೇಶಾದ್ಯಂತ ಜನ ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀರ್ಪನ್ನು ಗೌರವಿಸೋಣ ಎಂದಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುಪ್ರೀಂ ತೀರ್ಪನ್ನು ಗೌರವಪೂರ್ವಕವಾಗಿ ಸ್ವಾಗತಿಸಿದ್ದು, ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಉದ್ವೇಗಕ್ಕೆ ಒಳಗಾಗಬೇಡಿ, ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ, ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ “ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ” ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದು ಬರೆದುಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದು ಹೇಳಿದ್ದಾರೆ.

ತೀರ್ಪಿನ ಪ್ರಮುಖ ಅಂಶಗಳು:
ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.

ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.

ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.

ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ. ನಿರ್ಮೋಹಿ ಅಖಾರದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾರಕ್ಕೆ ಪ್ರಾತಿನಿಧ್ಯ ನೀಡಬೇಕು.

Share This Article
Leave a Comment

Leave a Reply

Your email address will not be published. Required fields are marked *