ಜೆಡಿಯುನಿಂದ ಪ್ರಶಾಂತ್ ಕಿಶೋರ್, ಪವನ್ ವರ್ಮಾ ಉಚ್ಛಾಟನೆ

Public TV
3 Min Read
Prashant Kishor Pavan Varma a

ಪಾಟ್ನಾ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಚುನಾವಣಾ ತಂತ್ರಗಾರಿಕೆ ನಿಪುಣನೆಂದು ಪ್ರಸಿದ್ಧವಾಗಿರುವ ಪ್ರಶಾಂತ್ ಕಿಶೋರ್ ಹಾಗೂ ಬಂಡಾಯ ನಾಯಕ ಪವನ್ ವರ್ಮಾ ಅವರನ್ನು ಜೆಡಿಯು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರು ಮನಸ್ಥಾಪ ಹೊಂದಿದ್ದರು. ಹೀಗಾಗಿ ಅವರ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಹಾಗೂ ಬಂಡಾಯ ನಾಯಕ ಪವನ್ ವರ್ಮಾ ಅವರನ್ನು ಪಕ್ಷದಿಂದ ಕೈಬಿಡಲಾಗಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಪ್ರಶಾಂತ್ ಕಿಶೋರ್ ಮೊರೆ ಹೋದ ದೀದಿ

Nitish Kumar

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜೆಡಿಯು, ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಪಕ್ಷದ ನಿಯಮಗಳಿಗೆ ಯಾವುದೇ ಗೌರವ ನೀಡಲಿಲ್ಲ. ಹೀಗಾಗಿ ಅವರನ್ನು ಅವರ ಸ್ಥಾನಗಳಿಂದ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದೆ.

ಒಂದೇ ಪಕ್ಷದಲ್ಲಿದ್ದರೂ ಭಿನ್ನ ಸಿದ್ಧಾಂತಗಳನ್ನು ಹೊಂದಿದ್ದ ನಿತೀಶ್ ಕುಮಾರ್ ಹಾಗೂ ಪ್ರಶಾಂತ್ ಕಿಶೋರ್ ಅವರ ಮಧ್ಯೆ ಕೆಲ ದಿನಗಳಿಂದ ಮಾತಿನ ಸಮರ ನಡೆದಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿತೀಶ್ ಬೆಂಬಲ ನೀಡಿದ್ದು ಪ್ರಶಾಂತ್ ಕಿಶೋರ್ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಕೆರಳಿದ್ದ ನಿತೀಶ್ ಕುಮಾರ್ ಪಕ್ಷ ಬಿಟ್ಟು ಹೋಗುವಂತೆ ಪ್ರಶಾಂತ್ ಕಿಶೋರ್ ಗೆ ಹೇಳಿದ್ದರು.

prashanth kishore 3

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಕ್ಕೆ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡೆ. ಅವರು ಪಕ್ಷದಲ್ಲಿ ಇರುವುದಾದರೆ ಇರಲಿ, ಇಲ್ಲವೇ ಬಿಟ್ಟು ಹೋಗಲಿ ಎಂದು ನಿತೀಶ್ ಕುಮಾರ್ ನೇರವಾಗಿಯೇ ಹೇಳಿದ್ದರು. ಇದಕ್ಕೆ ಪ್ರಶಾಂತ್ ಕಿಶೋರ್ ಕೂಡ ತಕ್ಕ ಉತ್ತರ ನೀಡಿದ್ದರು.

ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗಾಗಲೇ ಮಾತನಾಡಿದ್ದಾರೆ. ಆದರೆ ಇದಕ್ಕೆ ತಕ್ಕ ಉತ್ತರವನ್ನು ನೀಡುತ್ತೇನೆ. ಬಿಹಾರಕ್ಕೆ ಬರುತ್ತಿದ್ದೇನೆ. ಅಲ್ಲಿಯೇ ಬಂದು ತಕ್ಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದರು. ಅಷ್ಟೇ ಅಲ್ಲದೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದ ಪ್ರಶಾಂತ್ ಕಿಶೋರ್ ಅವರು, ‘ಎಂಥ ಮಟ್ಟಕ್ಕೆ ಇಳಿದು ಬಿಟ್ಟಿರಿ ನಿತೀಶ್, ಸುಳ್ಳು ಹೇಳುವುದಕ್ಕೆ ಇಷ್ಟೊಂದು ಕೀಳುಮಟ್ಟಕ್ಕೆ ಇಳಿಯುವುದೇ ಎಂದು ಪ್ರಶ್ನಿಸಿದ್ದರು.

ಪ್ರಶಾಂತ್ ಕಿಶೋರ್ ಯಾರು?:
2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.

prashanth kishore bjp

2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು.

ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಶಾಂತ್ ಕಿಶೋರ್ ತಮ್ಮ ರಾಜಕೀಯ ಚತುರತೆ ತೋರಿದ್ದರು. ಜಗನ್‍ಮೋಹನ್ ರೆಡ್ಡಿ ಅವರ ಶ್ರಮ ಹಾಗೂ ಪ್ರಶಾಂತ್ ತಂತ್ರಗಾರಿಕೆ ಪರಿಣಾಮ ವೈಎಸ್‍ಆರ್ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರ ಹಿಡಿದಿದೆ.

Share This Article
Leave a Comment

Leave a Reply

Your email address will not be published. Required fields are marked *