ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ನಾಕಾ ಬಳಿ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಂದಾಜು 56 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಿದ್ದಾಪುರ ತಾಲೂಕಿನ ಹೇರೂರಿನ ಅಬ್ದುಲ್ ಮುತಲಿಫ್ (31) ಹಾಗೂ ಅಬ್ದುಲ್ ಸೌದ್ (42) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಅಬ್ದುಲ್ ಮುತಲಿಫ್ ಮತ್ತು ಅಬ್ದುಲ್ ಸೌದ್ ಇವರು ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಆದರೆ ಚಿಪಗಿ ನಾಕಾ ಬಳಿ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಜಿ.ಟಿ.ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿದೆ. ಆಗ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಸುಮಾರು 56 ಲಕ್ಷ ರೂ. ನಗದು ಪತ್ತೆಯಾಗಿದೆ.
ತಕ್ಷಣ ಪೊಲೀಸರು ಇಬ್ಬರನ್ನು ಬಂಧಿಸಿ, 55 ಲಕ್ಷದ 96 ಸಾವಿರ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಹಣ ಸಾಗಿಸಲು ಬಳಸಿದ್ದ ಕಾರನ್ನು ಸಹ ಜಪ್ತಿ ಮಾಡಲಾಗಿದೆ. ಈ ಕುರಿತು ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಸಿಬ್ಬಂದಿ ಪ್ರಶಾಂತ್, ಚಂದ್ರಪ್ಪ, ಕೃಷ್ಣ, ಅನ್ಸಾರಿ, ರಾಜೇಶ್ ನಾಯಕ್, ರಾಜೇಶ್ ಕೊರಗ, ಜೋಸೆಫ್, ಶ್ರೀಧರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.