ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯೋಜನೆ ಮಾಡಿದ್ದ ತನಿಖಾ ತಂಡದವರು ಟಿಕೆಟ್ ಇಲ್ಲದೆ ಪ್ರಯಾಣಿಸಿದ 6,200 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.
ಫೆಬ್ರವರಿ 2020ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿದೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 50,079 ವಾಹನಗಳನ್ನು ತನಿಖೆ ಗೊಳಪಡಿಸಿದ್ದು, ಸುಮಾರು 5,274 ಪ್ರಕರಣಗಳನ್ನು ಪತ್ತೆ ಹಚ್ಚಿದೆ. 6,200 ಟಿಕೆಟ್ ರಹಿತ ಪ್ರಯಾಣಿಕರಿಂದ 8,46,570 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ಕಾರಣ 1,08,655 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಇಲಾಖೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ ಸಂಸ್ಥೆಯು ಈ ಮೂಲಕ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.