-ಸೆಕೆಂಡರಿ ಸಂಪರ್ಕದಲ್ಲಿರುವ 800 ಮಂದಿಗೆ ಹೋಮ್ ಕ್ವಾರಂಟೈನ್
ಮೈಸೂರು: ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವ ಏಳು ಜನರು ಇಂದು ಡಿಸ್ಚಾರ್ಜ್ ಆಗಲಿದ್ದರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಾ.ವೆಂಕಟೇಶ್, ಮೈಸೂರಿನ ಜನತೆ ಆತಂಕಕ್ಕೆ ಒಳಗಾಗೋದು ಬೇಡ. ಈಗಾಗಲೇ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಇಂದು ಏಳು ಜನರು ವರದಿ ನೆಗೆಟಿವ್ ಬಂದಿದೆ. ನೆಗೆಟಿವ್ ವರದಿ ಬಂದಿರುವ ಏಳು ಜನರನ್ನು ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ನಮ್ಮ ಸಿಬ್ಬಂದಿ ಎಲ್ಲದಕ್ಕೂ ಸಿದ್ಧರಾಗಿದ್ದು, ಸೋಂಕಿತರಿಗೆ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಆರಂಭದಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸರ್ಕಾರ ಸೆಕೆಂಡರಿ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ನಿರ್ದೇಶನ ನೀಡಿದೆ. ನಮ್ಮ ಅಧಿಕಾರಿಗಳು ಸೆಕಂಡರಿ ಸಂಪರ್ಕದಲ್ಲಿದ್ದ ಒಟ್ಟು 800 ಜನರ ಬಗ್ಗೆ ಮಾಹಿತಿ ಸಂಗ್ರಹಿಸಿ ಎಲ್ಲರನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪಾಸಿಟಿವ್ ಪ್ರಕರಣಗಳು ಎಷ್ಟೇ ಬಂದರೂ, ನಾವು ಚಿಕಿತ್ಸೆ ನೀಡಲು ಸಿದ್ಧವಿದ್ದೇವೆ. ಪಾಸಿಟಿವ್ ಪ್ರಕರಣಗಳು ಬರಲಿ, ಬರದೇ ಇರಲಿ ನೀವು ಮನೆಯಲ್ಲಿರಿ ಎಂದು ಜನತೆಗೆ ಸಲಹೆ ನೀಡಿದರು.
ಮೈಸೂರು ನಗರದಲ್ಲಿ 10 ಫೀವರ್ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಸದ್ಯ ಇರುವ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ.ವೆಂಕಟೇಶ್ ಮಾಹಿತಿ ನೀಡಿದರು.