ಹೋಟೆಲ್, ಮಾಲ್, ಶಾಪ್ ಮಾಲೀಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ

Public TV
1 Min Read
Bhaskar Rao

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಟೆಲ್, ಮಾಲ್, ಶಾಪ್ ಮಾಲೀಕರಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಅಂಗಡಿ, ಮಾಲ್, ಬ್ಯಾಂಕ್, ಹೋಟೆಲ್, ಕಚೇರಿ ಹಾಗೂ ಸಂಸ್ಥೆಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ನೀವು ಮಾಸ್ಕ್ ಧರಿಸುವುದನ್ನು ಕಾರ್ಯಗತಗೊಳಿಸದಿದ್ದರೆ ಮತ್ತು ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳದಿದ್ದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದು ಈಗಾಗಲೇ ಕಾರ್ಯಗತಕ್ಕೆ ಬಂದಿದ್ದು, ಸಾರ್ವಜನಿಕರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ತಿಳಿಸಿದ್ದಾರೆ.

ನಗರದ ಅಂಗಡಿ, ಮಾಲ್, ಬ್ಯಾಂಕ್, ಹೋಟಲ್ ಸೇರಿದಂತೆ ವಿವಿಧ ಕಡೆಯ ಸಿಬ್ಬಂದಿ ಹಾಗೂ ಗ್ರಾಹಕರು ಮಾಸ್ಕ್ ಧರಿಸುತ್ತಿಲ್ಲ. ಅಷ್ಟೇ ಅಲ್ಲದೆ ಗ್ರಾಹಕರಿಗೆ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸಿಲ್ಲ. ಸಾಕಷ್ಟು ಕಡೆ ಅಂಗಡಿ ಮಾಲೀಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜೂನ್ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ಕೊರೊನಾ ಸ್ವಲ್ಪ ನಿಯಂತ್ರಣಕ್ಕೆ ಸಿಕ್ಕಿತ್ತು. ಆದರೆ ಕಳೆದ ಕೆಲ ದಿನಗಳಿಂದ ಸೋಂಕಿತರು ಹಾಗೂ ಮೃತರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *