ಶಿವಮೊಗ್ಗ: ಅರಣ್ಯ ಇಲಾಖೆಯ ಎಡವಟ್ಟಿನಿಂದ ವನ್ಯ ಜೀವಿಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆಗುಂಬೆ ಸಮೀಪದ ಕಾರೀ ಕುಂಬ್ರಿ ಅರಣ್ಯದಲ್ಲಿ ಅರಣ್ಯ ಇಲಾಖೆ ಹೊಸದಾಗಿ ನೆಡುತೋಪು ನಿರ್ಮಿಸಿದ್ದು, ಇಲ್ಲಿ ಹಲವು ಜಾತಿಯ ವಿವಿಧ ಗಿಡಗಳನ್ನು ನೆಡಲಾಗಿದೆ. ಈ ಗಿಡಗಳನ್ನು ವನ್ಯಜೀವಿಗಳು ತಿನ್ನುತ್ತವೆ. ಇದರಿಂದ ಗಿಡಗಳು ಹಾಳಾಗಿ ಹೋಗುತ್ತವೆ ಎಂಬ ಉದ್ದೇಶದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಗಿಡಗಳ ಬುಡದಲ್ಲಿ ವಿಷಪೂರಿತ ಔಷಧಿಯನ್ನು ಪ್ಲಾಸ್ಟಿಕ್ ಕವರ್ನಲ್ಲಿ ಕಟ್ಟಿ ಪ್ರತಿಯೊಂದು ಗಿಡಕ್ಕೂ ಕಟ್ಟಿದ್ದಾರೆ.
ಈ ಮೂಲಕ ವನ್ಯ ಜೀವಿಗಳ ಸಂರಕ್ಷಿಸಬೇಕಾದ ಅರಣ್ಯ ಇಲಾಖೆಯೇ ವನ್ಯಜೀವಿಗಳ ಪ್ರಾಣಕ್ಕೆ ಸಂಚಕಾರ ತಂದೊಡ್ಡಿದೆ. ಅಲ್ಲದೇ ಅರಣ್ಯ ಪ್ರದೇಶದಲ್ಲಿ ಮೇವು ಅರಸಿ ಹೋಗುವ ಜಾನುವಾರುಗಳಿಗೂ ಕುತ್ತು ಉಂಟಾಗಿದೆ. ಈ ವಿಷಪೂರಿತ ಔಷಧಿ ಸೇವನೆಯಿಂದ ಆಗುಂಬೆ ಸುತ್ತಮುತ್ತಲಿನ ಗ್ರಾಮದಲ್ಲಿ ಇಂದು ನಾಲ್ಕು ಹಸುಗಳು ಸಹ ಪ್ರಾಣ ಕಳೆದುಕೊಂಡಿವೆ.
ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಾನುವಾರುಗಳ ಸಾವಿಗೆ ಕಾರಣವಾಗಿರುವ ಅರಣ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.