ಎದುರಾಳಿಯನ್ನು ಎಂದಿಗೂ ಪ್ರಬಲ ಎಂದೇ ಭಾವಿಸಬೇಕು: ಬಿ.ಸಿ.ಪಾಟೀಲ್

Public TV
2 Min Read
BC PATIL 768x491 1

ಹಾವೇರಿ: ಯುದ್ಧದಲ್ಲಿ ನಮ್ಮ ಎದುರಾಳಿ ಎಷ್ಟೇ ದುರ್ಬಲವಾಗಿದ್ದರೂ ಮೈಮರೆತು ಕೂರದೇ ಪ್ರಬಲವಾಗಿಯೇ ಇದ್ದಾನೆ ಎಂದು ಭಾವಿಸಿ ಕಣದಲ್ಲಿ ಹೋರಾಡಲೇಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ವಿಧಾನ ಪರಿಷತ್ತಿಗೆ ಅ.28 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಎಸ್.ವಿ.ಸಂಕನೂರು ಅವರು ಹಿರೆಕೆರೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರ ಕುರಿತು ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

HVR BC Patel 2

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿಯ 23 ಶಾಸಕರು, ಐವರು ಮಂತ್ರಿಗಳು, ನಾಲ್ವರು ಸಂಸದರಿದ್ದು, ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಿದ್ದರೂ ಸಹ ಎದುರಾಳಿಯನ್ನು ಹಗುರವಾಗಿ, ಗೆಲುವು ಸುಲಭ ಎಂದು ಪರಿಗಣಿಸದೆ ಹೊಸ ಚುನಾವಣೆ ಎಂದು ಅಷ್ಟೇ ಹುಮ್ಮಸ್ಸಿನಿಂದ ಮನೆಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಬೇಕು. ಶಿಕ್ಷಣ ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರು ದುಡಿಯಬೇಕು. ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ಶಾಸಕರವರೆಗೆ ಎಲ್ಲರೂ ಅನುಭವಿಗಳೇ ಇರುವುದರಿಂದ ಈ ಚುನಾವಣೆಯನ್ನು ಗೆಲ್ಲಲೇಬೇಕು ಸಂಕನೂರು ಅವರಿಗೆ ಕ್ಷೇತ್ರದಲ್ಲಿ ಜಯಗಳಿಸಲೇಬೇಕೆಂದು ಚುನಾವಣಾ ನೀತಿ ರೂಪಿಸಬೇಕು ಎಂದು ಕರೆ ನೀಡಿದರು.

HVR BC Patel 1

ಅಕ್ಟೋಬರ್ 18 ರಂದು ಹಿರೆಕೆರೂರು ತಾಲೂಕಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಭೇಟಿಗೂ ಮುನ್ನ ಪಕ್ಷ ಸಂಘಟನೆಗೆ ಒತ್ತು ನೀಡಲು ಈ ಪೂರ್ವಭಾವಿ ಸಭೆ ನಡೆಸಲಾಗಿದೆ. ಕ್ಷೇತ್ರದಲ್ಲಿ ಸಂಘಟಿತ ಉತ್ಸಾಹಿ ಬಿಜೆಪಿಯ ಕಾರ್ಯಕರ್ತರ ಪಡೆಯೇ ಇದೆ. ಎಲ್ಲರೂ ಸಂಕನೂರರ ಗೆಲುವಿಗಾಗಿ ಶ್ರಮಿಸಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

BJP SULLAI

ಅಭ್ಯರ್ಥಿ ಎಸ್.ವಿ.ಸಂಕನೂರು ಮಾತನಾಡಿ, ಹಿರೆಕೆರೂರಿನಲ್ಲಿ ಬಿಜೆಪಿಯ ಸಾಹಸಿ ಕಾರ್ಯಪಡೆಯೇ ಇದೆ.ಕೃಷಿ ಸಚಿವರಾದ ಬಿ.ಸಿ.ಪಾಟೀಲರ ನೇತೃತ್ವದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ತಮ್ಮ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಶ್ರಮಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುಶಾಂತ ಎತ್ತಿನಹಳ್ಳಿ, ಮಹೇಂದ್ರ ಬಡಳ್ಳಿ, ಶಕ್ತಿಕೇಂದ್ರದ ಪ್ರಮುಖರು ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *