ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಿ.ಪಿ. ಯೋಗೀಶ್ವರ್ ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಶುಕ್ರವಾರ ಉಡುಪಿಗೆ ಆಗಮಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಶಾಸಕ ಯೋಗೀಶ್ವರ್ ಪರ ಬ್ಯಾಟ್ ಮಾಡಿದರು. ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯವಿದೆ. ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ. ಅಲ್ಲದೇ ನಮ್ಮ ಅಭಿಪ್ರಾಯವೂ ಅದೇ ಆಗಿದೆ ಎಂದರು.
ಈ ಬಗ್ಗೆ ಕೇಂದ್ರದ ವರಿಷ್ಠರು ಮತ್ತು ಮುಖ್ಯಮಂತ್ರಿ ಅವರು ಸಮಾಲೋಚನೆ ಮಾಡುತ್ತಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸಾಕಷ್ಟು ಗಮನಸೆಳೆದಿದೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಒಂದು ಜಟಿಲ ವಿಚಾರವಾಗಿದೆ. ಅಲ್ಪಾವಧಿಯಲ್ಲಿ ಎಲ್ಲವೂ ಗೊತ್ತಾಗಲಿದೆ. ಬೇರೆ ಪಕ್ಷದಿಂದ ಬಿಜೆಪಿಗೆ ಬಂದವರಿಗೆ ಸ್ಥಾನ ನೀಡುವುದು ಮೂಲ ಬಿಜೆಪಿಗರಿಗೆ ಬೇಸರ ವಿಚಾರವಾದರೂ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣೀಕರ್ತರಾಗಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯಲ್ಲಿದ್ದಾಗ ಎಲ್ಲರೂ ಒಂದೇ. ಒಳಗೆ ಹೊರಗೆ ಅನ್ನೋ ಭಾವನೆ ಸರಿಯಲ್ಲ, ತಾರತಮ್ಯಕ್ಕೆ ಅವಕಾಶ ಇಲ್ಲ. ಎಲ್ಲರನ್ನೂ ಕುಟುಂಬದ ರೀತಿ ಜೋಡಿಸಿಕೊಂಡು ಹೋಗಬೇಕಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.