ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ಸರ್ಕಸ್ ತೆರೆಗೆ ದಿನಾಂಕ ನಿಗದಿಯಾಗಿದೆ. ತಮ್ಮ ಲೆಕ್ಕಾಚಾರದಂತೆ ಸಂಪುಟ ವಿಸ್ತರಣೆ ಮಾಡಲು ಸಿಎಂ ಯಡಿಯೂರಪ್ಪ ಬಹುತೇಕ ಯಶಸ್ವಿಯಾಗಿರೋದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇತ್ತ ಉಪ ಚುನಾವಣೆಯಲ್ಲಿ ಗೆದ್ದು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವು ಯಡಿಯೂರಪ್ಪರನ್ನ ಮತ್ತಷ್ಟು ರಾಜಕೀಯವಾಗಿ ಬಲಿಷ್ಠರನ್ನಾಗಿಸಿದೆ.
ಇತ್ತ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕೇಳಿ ಬಂದಿದ್ದರೂ, ಭಾನುವಾರ ನಡೆದ ಸಭೆಯಲ್ಲಿ ಈ ಬಗ್ಗೆ ಬಿಜೆಪಿ ಹೈಕಮಾಂಡ್ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದಾಗ ಹಲವು ಶಾಸಕರು ದೂರು ಕೊಟ್ಟಿದ್ದರು. ಹಾಗಾಗಿ ಸರ್ಕಾರದಲ್ಲಿರುವ ಭಿನ್ನಾಭಿಪ್ರಾಯ, ತೊಡಕುಗಳನ್ನು ನಿವಾರಿಸಿಕೊಳ್ಳಿ ಎಂದು ಶಾಸಕರ ದೂರು-ದುಮ್ಮಾನಗಳನ್ನು ಪ್ರಸ್ತಾಪಿಸಿ ಬಿಎಸ್ವೈಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದಷ್ಟು ಸಲಹೆ-ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮುಂದಿನ ಮೂರು ಉಪ ಚುನಾವಣೆಗಳಲ್ಲಿ ಜಯ ಗಳಿಸಲು ಅಗತ್ಯ ಸಿದ್ಧತೆ ನಡೆಸಿಕೊಳ್ಳಿ. ಪ್ರಮುಖ ನಿರ್ಧಾರಗಳನ್ನ ತೆಗೆದುಕೊಳ್ಳುವ ಮುನ್ನ ಸಚಿವರು ಮತ್ತು ಪಕ್ಷದ ಕೋರ್ ಕಮೀಟಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಅಮಿತ್ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಎಲ್ಲರ ವಿಶ್ವಾಸ ಗಳಿಸಿಕೊಂಡು ಆಡಳಿತ ನಡೆಸೋದಾಗಿ ಯಡಿಯೂರಪ್ಪನವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊಟ್ಟ ಮಾತು ಉಳಿಸಿಕೊಂಡ ಬಿಎಸ್ವೈ: ಸಿಎಂ ಬಿಎಸ್ವೈ ರಾಜ್ಯ ರಾಜಕೀಯದಲ್ಲಿ ವಿಭಿನ್ನ ಹಾದಿಯಲ್ಲಿ ಸಾಗುವ ಮೂಲಕ ಎಲ್ಲರ ಗಮನ ಸೆಳೆದವರು. ಕಾಂಗ್ರೆಸ್ನಲ್ಲಿ ಅತೃಪ್ತಿ ಹೊಂದು ಬಿಜೆಪಿಗೆ ಸೇರ್ಪಡೆಯಾದ ಎಲ್ಲಾ ವಲಸಿಗರಿಗೆ ಮಂತ್ರಿ ಸ್ಥಾನ ನೀಡುವುದಾಗಿ ವಾಗ್ದಾನ ನೀಡಿದ್ದರು. ಅದರಂತೆ ಭಾನುವಾರ ಹೈಕಮಾಂಡ್ ಜೊತೆ ಸಿಎಂ ಬಿಎಸ್ವೈ ಸಭೆ ನಡೆಸಿದ್ದು, ಹೈಕಮಾಂಡ್ ಸಂಪುಟ ವಿಸ್ತರಣೆಗೆ 3 ಷರತ್ತು ಬದ್ಧ ಅನುಮತಿ ನೀಡಿದೆ. ಈ ಬೆನ್ನೆಲ್ಲೇ ಯಡಿಯೂರಪ್ಪನವರು ವಲಸಿಗರಿಗೆ ಮಂತ್ರಿ ಸ್ಥಾನ ಕೊಡುವುದು ಖಚಿತಗೊಳಿಸಿದ್ದಾರೆ. ಹೀಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಬಿಎಸ್ವೈ ಹಿರಿಮೆ, ಹೆಗ್ಗಳಿಕೆ ಹೆಚ್ಚಾಗಿದೆ.