ಹುಬ್ಬಳ್ಳಿ: ಜನರ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ನಕಲಿ ಔಷಧ ಮಾರಾಟ ಮಾಡುತ್ತಿದ್ದ ಔಷಧ ಮಳಿಗೆಯ ಇಬ್ಬರು ಮಾಲೀಕರು ಹಾಗೂ ಅವುಗಳನ್ನು ಪೂರೈಸುತ್ತಿದ್ದ ಬೆಂಗಳೂರಿನ ಫಾರ್ಮಾ ಕಂಪನಿ ಮಾಲೀಕರೊಬ್ಬರಿಗೆ ಒಂದನೇ ಸೆಷನ್ಸ್ ಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ತಲಾ 10 ಸಾವಿರ ದಂಡ ವಿಧಿಸಿದೆ.
ಹುಬ್ಬಳ್ಳಿ ಜೆಸಿ ನಗರದ ರಾಧಾ ಫಾರ್ಮಾ ಪ್ರೊಡಕ್ಸನ್ ಔಷಧ ಮಳಿಗೆ ಮಾಲೀಕರಾದ ಗೋವಿಂದ ತ್ರಿವೇದಿ, ಜಗದೀಶ ತ್ರಿವೇದಿ ಮತ್ತು ಬೆಂಗಳೂರಿನ ದೀಪಕ ಇಂಟರ್ನ್ಯಾಷನಲ್ ಫಾರ್ಮಾಸುಟಿಕಲ್ಸ್ನ ವಿಕ್ರಮ ಭೋಜಾನಿ ಶಿಕ್ಷೆಗೆ ಒಳಗಾದ ಅಪರಾಧಿಗಳು.
2005ರಲ್ಲಿ ಔಷಧ ಪರಿವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶರಣಬಸಪ್ಪ ಹನುಮನಾಳ ಅವರು, ತಪಾಸಣೆ ನಡೆಸಿದಾಗ ಐದು ಬಗೆಯ ನಕಲಿ ಔಷಧಿಗಳು ದೊರೆತಿದ್ದವು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸುಶಾಂತ್ ಚೌಗಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆದರೆ, ಪಿಕಾಕ್ ಫಾರ್ಮಾ ಕಂಪನಿಯ ಸತೀಶ ಶರ್ಮಾ ತಲೆಮರೆಸಿಕೊಂಡಿದ್ದು, ಪ್ರಕರಣ ಪ್ರತ್ಯೇಕಿಸಲಾಗಿದೆ. ಪ್ರಕರಣದಲ್ಲಿ ಸಹಾಯಕ ಔಷಧ ನಿಯಂತ್ರಕ ಕೆ.ಎಸ್. ಮಲ್ಲಿಕಾರ್ಜುನ ಅನುಸರಣಾಧಿಕಾರಿ ಆಗಿದ್ದರು.