ಚಿಕ್ಕಬಳ್ಳಾಪುರ: 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ರಾಜ್ಯ ಸರ್ಕಾರ ಗುರುತಿಸಿ ಕೋವಿಡ್-19 ಲಸಿಕಾಕರಣವನ್ನು ನಡೆಸಲು ಸೂಚಿಸಿದ್ದು, ಅದರಂತೆ ಇಂದಿನಿಂದ 18 ರಿಂದ 44 ವರ್ಷದ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕಾಕರಣವನ್ನು ಪ್ರಾರಂಭಿಸಲು ಉದ್ದೇಶಿಸಲಾಗಿರುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಇಂದಿರಾ ಕಬಾಡೆ ತಿಳಿಸಿದ್ದಾರೆ.
ಈ ಪ್ರಕಾರ ಕೆಲ ಆದ್ಯತಾ ಗುಂಪುಗಳನ್ನು ಗುರುತಿಸಿದ್ದು, ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು, ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು, ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆ ಸಿಬ್ಬಂದಿಗಳು, ಬೀದಿ ಬದಿ ವ್ಯಾಪಾರ ಮಾಡುವವರು, ಭದ್ರತೆ ಮತ್ತು ಕಛೇರಿಗಳ ಹೌಸ್ಕೀಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು, ವಯೋವೃದ್ಧರು/ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು (ಪೆಟ್ರೊಲ್ ಬಂಕ್, ಕರ್ಮಚಾರಿ ಒಳಗೊಂಡಂತೆ) ಔಷಧಿ ತಯಾರಿಸುವ ಕಂಪನಿಯ ಸಿಬ್ಬಂದಿ, ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿ, ವೃದ್ದಾಶ್ರಮ ವಾಸಿಗಳು, ನಿರ್ಗತಿಕರು, ಭಾರತೀಯ ಆಹಾರ ನಿಗಮ ಸಿಬ್ಬಂದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೆಲಸಗಾರರು ಲಸಿಕೆ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಆದ್ಯತಾ ಗುಂಪಿನ ಚಿಕ್ಕಬಳ್ಳಾಪುರ ಜಿಲ್ಲೆಯ ಫಲಾನುಭವಿಗಳು ಇಂದಿನಿಂದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಬಹುದು. ಆದರೆ ಲಸಿಕಾ ಕೇಂದ್ರಕ್ಕೆ ತೆರಳುವಾಗ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಪಾಲಿಸಿ ಎಂದು ಇಂದಿರಾ ಕಬಾಡೆ ಮನವಿ ಮಾಡಿಕೊಂಡಿದ್ದಾರೆ.