ಹಾವೇರಿ: ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ಹಾವೇರಿ ಜಿಲ್ಲೆಯಲ್ಲಿ 2008 ಜೂನ್ 10 ರಂದು ಗೋಲಿಬಾರ್ ನಡೆದು 14 ವರ್ಷ ಕಳೆದಿದ್ದು, ಇಂದು ರೈತ ಸಂಘಟನೆಗಳಿಂದ ಹುತಾತ್ಮ ದಿನಚರಣೆ ಆಚರಿಸಲಾಯಿತು.
2008 ಜೂನ್ 10 ರಂದು ನಡೆದ ಗೋಲಿಬಾರ್ ಗೆ ಇಬ್ಬರು ರೈತರು ಪೊಲೀಸ್ ಗುಂಡಿಗೆ ಬಲಿಯಾಗಿದ್ದಾರೆ. ಅಲ್ಲದೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹುತಾತ್ಮ ರೈತರ ಸ್ಮರಣಾರ್ಥ ರೈತ ಸಂಘಟನೆ ಮುಖಂಡರು ಇಂದು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ 14ನೇ ವರ್ಷದ ರೈತ ಹುತಾತ್ಮ ದಿನಾಚರಣೆ ಮಾಡಿದರು. ಗೋಲಿಬಾರ್ ನಲ್ಲಿ ಹುತಾತ್ಮರಾದ ಸಿದ್ದಲಿಂಗಪ್ಪ ಚೂರಿ ಹಾಗೂ ಪುಟ್ಟಪ್ಪ ಹೊನ್ನತ್ತಿಯವರ ವೀರಗಲ್ಲಿಗೆ ರೈತರು ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ರೈತ ಮುಖಂಡರು, ಕೇಂದ್ರ ಸರ್ಕಾರ ಜಾರಿಗೆ ಮಾಡುತ್ತಿರುವ ರೈತ ವಿರೋಧಿ ಕಾನೂನುಗಳನ್ನು ನಿಷೇಧ ಮಾಡಬೇಕು. ರೈತರಿಗೆ ಸರಿಯಾದ ಸಮಯಕ್ಕೆ ರಸಗೊಬ್ಬರ, ಬಿತ್ತನೆ ಬೀಜ ಸಿಗುವಂತೆ ಮಾಡಬೇಕು. ರೈತರ ಬೆಳೆಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ಕೋವಿಡ್ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೋವಿಡ್ ಸಂದರ್ಭದಲ್ಲಿ ಬಹುತೇಕ ರೈತರು ಸಂಕಷ್ಟ ಎದುರಿಸಿದ್ದಾರೆ. ಎಲ್ಲ ಬೆಳೆಗೆ ಬೆಂಬಲ ಬೆಲೆ ಹಾಗೂ ರೈತರಿಗೆ 24 ಸಾವಿರ ರೂ. ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.