ಹುಬ್ಬಳ್ಳಿ: ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು, ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಂಬಂಧಪಟ್ಟ ಅಧಿಕಾರಿಗಳ ಜತೆ #NEP2020 ಅನುಷ್ಠಾನದ ಕುರಿತು ಚರ್ಚಿಸಿದೆ.
ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ತ್ವರಿತ ಜಾರಿಗೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮೌಲ್ಯಾಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ.
1/2 pic.twitter.com/0GRDZG1Fs8
— Dr. Ashwathnarayan C. N. (@drashwathcn) July 12, 2021
ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಹೇಳಿದರು.
ಬಿಯಾಂಡ್ ಬೆಂಗಳೂರು ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬದಲಾಗುತ್ತಿರುವ ಸಮಾಜಕ್ಕೆ ತಕ್ಕಂತೆ ಗುಣಮಟ್ಟದ ಮಾನವ ಸಂಪನ್ಮೂಲ ಕಲ್ಪಿಸುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ.
ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸುವ ಹಾದಿಯಲ್ಲಿ ಹೆಜ್ಜೆ ಹಾಕಲಾಗುತ್ತಿದೆ.
ಈ ದೃಷ್ಟಿಯಿಂದ ಎಲ್ಲ ವಿಶ್ವವಿದ್ಯಾಲಯಗಳ ಸಹಕಾರ ಬಹುಮುಖ್ಯ. @kud_vc@CMofKarnataka
2/2 pic.twitter.com/wOslmmtuee
— Dr. Ashwathnarayan C. N. (@drashwathcn) July 12, 2021
ಹಿನ್ನಡೆ ಆಗಿಲ್ಲ:
ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ಹೊರತು ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್, ದೇಶಪಾಂಡೆ ಫೌಂಡೇಶ್ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.
ಕಾಲೇಜು ಆರಂಭಕ್ಕೆ ಸಿದ್ಧತೆ:
ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರ್ಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನ ಹೀಗೆ ಇರಲು ಸಾಧ್ಯ? ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜೊತೆ ಜೊತೆಗೇ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.
ಮೂರನೇ ಅಲೆ ತಡೆಗೆ ಸಿದ್ಧತೆ:
ಸರ್ಕಾರ ಎಲ್ಲೂ ಮೈಮರೆತಿಲ್ಲ. ಒಂದೆಡೆ ಲಸಿಕಾಕರಣದ ವೇಗ ಹೆಚ್ಚಿಸುತ್ತಲೇ ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ರಾಜ್ಯಾದ್ಯಂತ ಕೋವಿಡ್ ಸೋಂಕಿತರಿಗಾಗಿಯೇ 6,000 ಐಸಿಯು ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣಲ್ಲಿ ವೈದ್ಯರು, ನರ್ಸ್ ಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಗ್ರೂಪ್ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು ಡಾ.ಅಶ್ವಥ್ ನಾರಾಯಣ್ ತಿಳಿಸಿದರು.
ಜನಸಂಖ್ಯೆಯನ್ನು ತಡೆಯಬೇಕು:
ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಇಬ್ಬರು ಮಕ್ಕಳ ನೀತಿಯ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿಗೆ ಪೂರಕವಾಗಿ ಜನಸಂಖ್ಯೆ ಪ್ರಮಾಣವನ್ನು ತಡೆಯಬೇಕಾಗಿದೆ. ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತಿದೆ ಎಂದರು.