ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಅವರು ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.
ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆ ಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು. ಇದೇ ತಿಂಗಳ 25ರದು ನವದೆಹಲಿಗೆ ತೆರಳಿ 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ, ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ಮಹಾನ್ ಪ್ರಾಮಾಣಿಕ, ಸತ್ಯ ಹರಿಶ್ಚಂದ್ರನ ಎರಡನೇ ಕುಡಿ: ಬಿ.ಸಿ. ಪಾಟೀಲ್ ಕಿಡಿ
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರಿಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೊಬರ್ ಮಾಹೆಯಲ್ಲಿ ರಾಜ್ಯಕ್ಕೆ ಬರಬಹುದು. ಕೋವಿಡ್ ಮೂರನೇ ಅಲೆಯ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.