ಚಿಕ್ಕೋಡಿ(ಬೆಳಗಾವಿ): ನಾನು ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ದು ನಿಜ ಎಂದು ವಲಸಿಗ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಣದ ಆಫರ್ ಕೊಟ್ಟರೂ ನಾನು ಬೇಡ ಎಂದಿದ್ದೆ. ಯಾವುದೇ ಹಣ ನನಗೆ ಬೇಡ. ಬಿಜೆಪಿಗೆ ಬರ್ತೀನಿ ಒಳ್ಳೆಯ ಸ್ಥಾನ-ಮಾನ ನನಗೆ ಬೇಕು ಎಂದಿದ್ದೆ. ಹಣದ ಬದಲು ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸೇವೆ ಮಾಡುವ ನಿಟ್ಟಿನಲ್ಲಿ ಯೋಗ್ಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ
ಈಗ ಸಚಿವ ಸ್ಥಾನ ಸಿಕ್ಕಿಲ್ಲ ಈ ವಿಚಾರದಲ್ಲಿ ಹಿರಿಯ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ. ಬರುವ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು