ಹಣ ಬಲದ ಎದುರು ಜನ ಬಲಕ್ಕೆ ಸೋಲು: ಎಚ್‌ಡಿಕೆ

Public TV
2 Min Read
HDK

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನುಭವಿಸಿದರ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಾಟ ನಡೆಸಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

bjp congress 1

ಹಿಂದೆ ಹೇಳಿರುವ ಹಾಗೆ 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಜೊತೆಗೆ ಈ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ದೊಡ್ಡ ಪಕ್ಷಗಳ ಹಣ ಹಂಚಿಕೆ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಆರೋಪಿಸಿದರು.

ಚುನಾವಣೆ ಎಂದರೆ ಸೋಲು-ಗೆಲುವು ಸಹಜ. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಇನ್ನೂ ಮುಂದೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದಿಗೂ ಧೃತಿಗೆಡುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು

jds

ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದರು. ಆದ್ದರಿಂದ ಜೆಡಿಎಸ್ ಸೋಲು ಅನುಭವಿಸಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರೇ ನೇರವಾಗಿ ಹಕ್ಕು ಚಲಾಯಿಸುವುದರಿಂದ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದ ಅವರು ಜಯ ಗಳಿಸಿದ ಎಲ್ಲ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದರು. ಇದನ್ನೂ ಓದಿ: ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ: ಡಿಕೆಶಿ

 

Share This Article
Leave a Comment

Leave a Reply

Your email address will not be published. Required fields are marked *