ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ ಹೆಸರು ಇಡುವುದು ಬೇಡವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನದ ಕನಸಾದ ವಿಮಾನ ನಿಲ್ದಾಣ ಸ್ಥಾಪನೆ ನನಸಾಗುತ್ತಿದೆ. ಇಲ್ಲಿನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದೀರಿ ಇದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತಿ ಜೊತೆಗಿನ ಫೋಟೋ ಹಂಚಿಕೊಂಡ ಐಎಎಸ್ ಟಾಪರ್ ಟೀನಾ ದಾಬಿ
ಈ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೆ ನನ್ನ ಕೃತಜ್ಞತೆಗಳು. ದೇಶದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್
ಆದ್ದರಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಮನವಿ ಮಾಡಿದ್ದಾರೆ.