ಕೋಲಾರ: ದಾರಿಯಲ್ಲಿ ಪೈಪ್ ಲೈನ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಐದು ಜನರಿಗೆ ಗಾಯವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕೆಜಿಎಫ್ ಸಮೀಪದ ಕದಿರೇನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಹಾಗೂ ಕುಟುಂಬಸ್ಥರು ಶೌಚಾಲಯ ನೀರನ್ನು ಮನೆ ಮುಂದೆ ಬಿಡಲಾಗುತ್ತಿದೆ ಎಂದು ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ.
ಅಪ್ಪಿರೆಡ್ಡಿ, ಶ್ರೀರಾಮಪ್ಪ, ಬಾಲ, ಆನಂದ, ಶ್ರೀರಾಮಪ್ಪ ಎಂಬವರು ದಲಿತ ಕುಟುಂಬದ ಗೌರಮ್ಮ, ನಾಗವೇಣಿ, ಮಲ್ಲಿಕಾ, ಮಹೇಶ್ ಹಾಗೂ ಶ್ರೀನಿವಾಸ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಗ್ರಾಮದಲ್ಲಿ ಒಂದು ಡಿಎಅರ್ ತುಕಡಿ ಸೇರಿದಂತೆ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಅಂಡರ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಅರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.