ಶ್ರೀನಗರ: 30 ವರ್ಷದ ಇತಿಹಾಸದಲ್ಲಿ ಪ್ರತಿ ಬಾರಿಯೂ ಗೃಹ ಸಚಿವರು ಕಾಶ್ಮೀರಕ್ಕೆ ಭೇಟಿ ನೀಡಿದಾಗ ಪ್ರತಿಭಟನೆ ಬಂದ್ ನಡೆಯುವುದು ಸಾಮಾನ್ಯವಾಗಿತ್ತು. ಆದರೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಎರಡು ದಿನದ ಪ್ರವಾಸಕ್ಕೆಂದು ಬುಧವಾರ ಕಾಶ್ಮೀರಕ್ಕೆ ಭೇಟಿ ನೀಡಿದ್ದು ,ಯಾವುದೇ ರೀತಿಯ ಬಂದ್ ಅಹಿತಕರ ಘಟನೆ ನಡೆದಿಲ್ಲ.
ಕೇಂದ್ರ ಗೃಹ ಸಚಿವರಾದ ಮೇಲೆ ಮೊದಲ ಬಾರಿಗೆ ಅಮಿತ್ ಶಾ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದು ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಇದೇ ವೇಳೆ ಕಾಶ್ಮೀರದಲ್ಲಿ ಭದ್ರತೆ ಮತ್ತು ಅಭಿವೃದ್ಧಿಯ ವಿಚಾರವಾಗಿ ಹಲವಾರು ಸಭೆಗಳಲ್ಲಿ ಭಾಗವಹಿಸಿದರು.
ಈ ಎರಡು ದಿನಗಳಲ್ಲಿ ಕಾಶ್ಮೀರ ರಾಜ್ಯದ ಬಿಜೆಪಿ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಪಂಚಾಯತ್ ಸದಸ್ಯರಗಳನ್ನು ಅಮಿತ್ ಶಾ ಭೇಟಿ ಮಾಡಿದ್ದಾರೆ. ಇದರ ಜೊತೆಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿ ಅ ಸಭೆಯಲ್ಲಿ ಉಗ್ರರು ಮತ್ತು ಗಲಭೆಕೋರರ ವಿರುದ್ಧ ಕಠಿಣ ವಿಧಾನವನ್ನು ಮುಂದುವರಿಸಲು ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಅಮರನಾಥ ತೀರ್ಥಯಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಸೂಚಿಸಿದ್ದಾರೆ.
ಅಮಿತ್ ಶಾ ಅವರ ಈ ಕಾಶ್ಮೀರ ಭೇಟಿಯಲ್ಲಿ ಇನ್ನೊಂದು ವಿಶೇಷತೆ ಎಂದರೆ, ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಿದರೆ ಮಾತ್ರ ರಾಜ್ಯಪಾಲರು ಹೋಗಿ ಅವರನ್ನು ಬರ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಈ ಶಿಷ್ಟಾಚರವನ್ನು ಮುರಿದು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ ಗೃಹ ಸಚಿವರನ್ನು ಬರ ಮಾಡಿಕೊಂಡಿದ್ದರು.
ಎಲ್ಲ ರೀತಿಯ ಶಿಷ್ಟಾಚಾರಗಳನ್ನು ಬದಿಗೊತ್ತಿದ ರಾಜ್ಯಪಾಲ ಸತ್ಯಪಾಲ್ ಮಲಿಕ್ ತಮ್ಮ ರಾಜಕೀಯ ಸಲಹೆಗಾರ ಮತ್ತು ಹಿರಿಯ ಅಧಿಕಾರಿಗಳ ಜತೆಗೆ ವಿಮಾನ ನಿಲ್ದಾಣಕ್ಕೆ ಹೋಗಿ ಅಮಿತ್ ಶಾ ಅವರನ್ನು ಬರ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಅಮಿತ್ ಶಾ ಉನ್ನತ ಮಟ್ಟದ ಸಭೆ ಸಹ ನಡೆಸಿದ್ದಾರೆ.