ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ (Heart Attack) ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.
ಬೇಲೂರು ಪಟ್ಟಣದ, ಜೆಪಿನಗರದಲ್ಲಿ ವಾಸವಾಗಿದ್ದ ಲೇಪಾಕ್ಷಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೃಹಿಣಿಯಾಗಿದ್ದ ಲೇಪಾಕ್ಷಿ ಬೆಳಿಗ್ಗೆ ಮನೆಯಲ್ಲಿದ್ದಾಗ ಸುಸ್ತು ಎಂದು ಹೇಳಿದ್ದರು. ಕೂಡಲೇ ಲೇಪಾಕ್ಷಿ ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಹೃದಯಾಘಾತದಿಂದ ಲೇಪಾಕ್ಷಿ ಮೃತಪಟ್ಟಿದ್ದರು.
ಪ್ರೊಫೆಸರ್ ಸಾವು
ಹೊಳೆನರಸೀಪುರದ ಮಹಿಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿದ್ದ ಮುತ್ತಯ್ಯ (58) ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ.
ಚನ್ನರಾಯಪಟ್ಟಣದ ನಿವಾಸಿಯಾಗಿದ್ದ ಮುತ್ತಯ್ಯ ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದರು. ಈ ವೇಳೆ ಬೈಪಾಸ್ ರಸ್ತೆಯಲ್ಲಿ ಟೀ ಕುಡಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತಾಲ್ಲೂಕು ಆಸ್ಪತ್ರೆಗೆದಾಖಲಿಸಲಾಗಿತ್ತು. ಅಷ್ಟರಲ್ಲಿ ಮುತ್ತಯ್ಯ ಅವರ ಪ್ರಾಣಪಕ್ಷಿ ಹೋಗಿತ್ತು. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ
ಡಿ ಗ್ರೂಪ್ ನೌಕರ ಬಲಿ:
ಚನ್ನರಾಯಪಟ್ಟಣದ ನುಗ್ಗೇಹಳ್ಳಿ ನಾಡಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿದ್ದ ಕುಮಾರ್(57) ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ. ಮನೆಯಲ್ಲಿಯೇ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಮಾರ್ ಅವರನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಹೃದಯಾಘಾತದಿಂದ ಕುಮಾರ್ ಸಾವನ್ನಪ್ಪಿದ್ದಾರೆ. ಕುಮಾರ್ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.