ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಇದರ ಬಗ್ಗೆ ತನಿಖೆ ಆಗಬೇಕು ಎಂದು ಚುನಾವಣೆ ಅಯೋಗಕ್ಕೆ ದೂರು ನೀಡಿದ್ದರು.
ಈ ದೂರಿನ ಅನ್ವಯ ಪ್ರಜಾ ಪ್ರಾತಿನಿಧ್ಯ ಕಾಯಿದೆ 1951 ಕಲಂ 125ಚಿ ಪ್ರಕಾರ ಕ್ರಮ ಕೈಗೊಳ್ಳುವಂತೆ ಚುನಾವಣೆ ಆಯೋಗ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ಉತ್ತರ ನೀಡಿರುವ ಡಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ನೇ ಉಲ್ಲೇಖಿಸಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ಬಗ್ಗೆ ಚುನಾವಣಾ ಅಧಿಕಾರಿ ನೇರ ಕ್ರಮ ಅಸಾಧ್ಯ. ಈ ಬಗ್ಗೆ ದೂರುದಾರರೇ ಸೂಕ್ತ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು ಎಂದು ಮರು ಪತ್ರ ಬರೆದಿದ್ದಾರೆ.
ಅರೋಪವೇನು?
ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರಜ್ವಲ್ ರೇವಣ್ಣ ಅವರು ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಅವರು 7 ಕೋಟಿಗೂ ಹೆಚ್ಚು ಆದಾಯ ತೋರಿಸಿದ್ದಾರೆ. ಆದರೆ ಕೇವಲ ಮೂರು ಕೋಟಿಯಷ್ಟು ಆದಾಯದ ಮೂಲ ತೋರಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು 23 ಲಕ್ಷ ಪ್ರಜ್ವಲ್ಗೆ ಸಾಲ ನೀಡಿರೋದಾಗಿ ಹೇಳಿದ್ದಾರೆ. ಆದರೆ ಪ್ರಜ್ವಲ್ ಅಫಿಡವಿಟ್ನಲ್ಲಿ ಇದರ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಎ. ಮಂಜು ಆರೋಪಿಸಿದ್ದರು.