– ಜೀವ ಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ ಎಂದ ಅನಾಮಿಕ ವ್ಯಕ್ತಿ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಧರ್ಮಸ್ಥಳ (Dharmasthala Mass Burials) ಭಾಗದಲ್ಲಿ ನೂರಾರು ಶವಗಳ ಹೂತಿರುವುದಾಗಿ ಅನಾಮಿಕ ವ್ಯಕ್ತಿ, ದಕ್ಷಿಣ ಕನ್ನಡ ಎಸ್ಪಿ ಮುಂದೆ ಹೇಳಿಕೆ ನೀಡಿದ್ದಾರೆ.
ದೂರುದಾರನ ಹೇಳಿಕೆಯಲ್ಲೇನಿದೆ?
1995ರಿಂದ 2014ರವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್ಐಟಿ ರಚಿಸಿದ ಸರ್ಕಾರ
ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದರು. ನಾನು ಜೀವ ಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು.
ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ ಎಂದು ದೂರುದಾರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ | ಎಸ್ಐಟಿ ತನಿಖೆಗೆ ಸೌಜನ್ಯ ಕೇಸ್ ಇಲ್ಲ: ಪರಮೇಶ್ವರ್
ಧರ್ಮಸ್ಥಳ ಭಾಗದಲ್ಲಿ ಅಪರಿಚಿತ ಶವಗಳನ್ನು ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ, ಎಸ್ಐಟಿ ರಚಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ.