ಶಿವಮೊಗ್ಗ: ರಾತ್ರಿ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಸುಮಾರು 60 ಅಡಿ ಆಳದ ತೆರೆದ ಬಾವಿಗೆ ಬಿದ್ದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
ಬಾವಿಗೆ ಬಿದ್ದ ವ್ಯಕ್ತಿಯನ್ನು ಹನುಮಂತಪ್ಪ (48) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ಹನುಮಂತಪ್ಪ ನಂತರ ಮೇಲೆ ಬರಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಲಿಲ್ಲ. ನಂತರ ರಕ್ಷಣೆ ಮಾಡುವಂತೆ ಕೂಗಾಡಿಕೊಂಡಿದ್ದಾರೆ. ಹನುಮಂತಪ್ಪನ ಕೂಗಾಟ ಕೇಳಿ ಸ್ಥಳೀಯರು ಬಾವಿಯ ಬಳಿ ಜಮಾಯಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಗಮನಕ್ಕೆ ವಿಷಯ ತಿಳಿಸಿದ್ದಾರೆ.
ಕ್ಷಣಾರ್ಧದಲ್ಲಿಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬಾವಿಗೆ ಬಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆ ತಂದಿದ್ದಾರೆ. ಸಣ್ಣಪುಟ್ಟ ಗಾಯವಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ
ಬದುಕುಳಿದ ಗಾಯಳು ಹನುಮಂತಪ್ಪ ಅಗ್ನಿ ಶಾಮಕ ಸಿಬ್ಬಂದಿ ಸೇವೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಮಹಾಬಲೇಶ್ವರ, ಚಾಲಕ ಪ್ರಶಾಂತ್, ಸಿಬ್ಬಂದಗಳಾದ ಮಂಜುನಾಥ, ಪ್ರದೀಪ್, ಪರಶುರಾಮಪ್ಪ, ಪ್ರಸನ್ನ ಕುಮಾರ್, ಭಾಗವಹಿಸಿದ್ದರು. ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿ ಆರೋಗ್ಯದಲ್ಲಿ ಚೇತರಿಕೆ