ಬೆಳಗಾವಿ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಕ್ಕೆ ಆಕ್ರೋಶಗೊಂಡ ಪೋಷಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ.
ಕಳೆದ ಎರಡು ದಿನಗಳ ಹಿಂದೆ ತಾಯವ್ವಾ ಕಾಮಶೆಟ್ಟಿ ಎಂಬ ಬಾಲಕಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ. ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಹಾಗೂ ಅವರ ನಿರ್ಲಕ್ಷ್ಯಕ್ಕೆ ನಮ್ಮ ಮಗಳು ಸಾವನ್ನಪಿದ್ದಾಳೆ ಎಂದು ತಾಯಿ ಹಾಗೂ ಸಂಬಂಧಿಕರು ಆಕ್ರೋಶಗೊಂಡು ವೈದ್ಯರಾದ ಡಾ. ಅಂಬಲಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಹಿರಿಯ ವೈದ್ಯರು ಹಲ್ಲೆ ನಡೆಸುವುದನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸದ್ಯ ನ್ಯಾಯ ಒದಗಿಸಿಕೊಡುವವರಿಗೆ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿದ್ದಾರೆ.