ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಕಳೆದೊಂದು ವಾರದಿಂದ ಅಲ್ಪ ಪ್ರಮಾಣದಲ್ಲಿ ಬಿಡುವು ಕೊಟ್ಟಿದ್ದ ವರುಣ (Rain) ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಒಂದು ವಾರ ಕರುನಾಡಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ.
ಹೌದು. ರಾಜ್ಯದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ (Red Alert) ಮುಂದುವರಿದಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡು ಪ್ರದೇಶ, ಹಾಗೂ ದಕ್ಷಿಣ ಒಳನಾಡಿಗೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ನೀಡಿದ್ದು, ಮೂರನೇ ದಿನದಿಂದ ಮೂರು ದಿನ ಯಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ನೆಟ್ ಪರೀಕ್ಷೆ ಪೇಪರ್ ಸೋರಿಕೆ ಕೇಸ್ – ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.
ಇತ್ತ ಬೆಂಗಳೂರಿನಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಆಗಾಗ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಜೂನ್ ಕೊನೆ ವಾರ ಮತ್ತು ಜುಲೈ ಮೊದಲ ವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.