ಚಿಕ್ಕಬಳ್ಳಾಪುರ: ತೀವ್ರ ತಲೆನೋವು, ಆಯಾಸ ಆಗುತ್ತಿದೆ ಅಂತ ಯುವಕನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಆತನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಮೃತನ ಕುಟುಂಬದವರು ಆಸ್ಪತ್ರೆಯ ಮೇಲೆ ಕಲ್ಲು ತೂರಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಚೊಕ್ಕಂಡಹಳ್ಳಿ ಗ್ರಾಮದ ಆಕಾಶ್(19) ಮೃತ ಯುವಕ. ಕಳೆದ ಬುಧವಾರ ಆಕಾಶ್ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾನೆ.
ಆಕಾಶ್ಗೆ ಪ್ಲೇಟ್ ಲೇಟ್ ಕಡಿಮೆಯಿದ್ದು, ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದ ಎನ್ನಲಾಗಿದೆ. ನಮ್ಮ ಮಗನನ್ನು ನಿಮ್ಮ ಕೈಯಲ್ಲಿ ಉಳಿಸಲು ಆಗಲ್ಲ ಅಂದ ಮೇಲೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂತ ಹೇಳಬೇಕಿತ್ತು. ಅದನ್ನು ಬಿಟ್ಟು ಚೆನ್ನಾಗಿದ್ದಾನೆ, ಹುಷಾರಾಗುತ್ತಾನೆ ಎಂದು ಎರಡು ದಿನ ಚಿಕಿತ್ಸೆ ನೀಡುವ ನಾಟಕ ಮಾಡಿದ್ದು ಏಕೆ ಎಂದು ಪ್ರಶ್ನಿಸಿ ಆಕಾಶ್ ಸಂಬಂಧಿಕರು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳಿಕ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಮೃತನ ಸಂಬಂಧಿಕರು, ಆಸ್ಪತ್ರೆಯ ಕಿಟಕಿ, ಬಾಗಿಲುಗಳ ಮೇಲೆ ಕಲ್ಲು ತೂರಿ ಗಾಜು ಒಡೆದಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬಂದ ದೇವನಹಳ್ಳಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ಮೃತ ಆಕಾಶ್ ಸಂಬಂಧಿಕರು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು. ಸ್ವಲ್ಪ ಸಮಯದ ನಂತರ ಇಬ್ಬರೂ ರಾಜಿ ಮೂಲಕ ಇತ್ಯರ್ಥ ಪಡಿಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv