ನಟ ಡಾಲಿ ಧನಂಜಯ್ (Daali Dhananjay) ಈ ಬಾರಿ ಲೋಕಸಭಾ (Lok Sabha) ಚುನಾವಣೆಯ ಆಖಾಡಕ್ಕೆ ಇಳಿಯಲಿದ್ದಾರೆ ಎಂದು ಸುದ್ದಿ ಆಗಿತ್ತು. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಧನಂಜಯ್ ಅವರನ್ನು ಕಾಂಗ್ರೆಸ್ (Congress) ಕಣಕ್ಕೆ ಇಳಿಸಲಿದೆ ಎಂದು ಹೇಳಲಾಗಿತ್ತು. ಈ ಸುದ್ದಿ ಕೇವಲ ಗಾಂಧಿನಗರದಲ್ಲಿ ಮಾತ್ರವಲ್ಲ, ರಾಜಕೀಯ ವಲಯದಲ್ಲೂ ಸಂಚಲನ ಸೃಷ್ಟಿ ಮಾಡಿತ್ತು.
ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಡಾಲಿ ಚುನಾವಣೆ ಕುರಿತಂತೆ ಮಾಧ್ಯಮಗಳು ಕೇಳಲಾದ ಪ್ರಶ್ನೆಗೆ ಉತ್ತರಿಸಿರೋ ಸಿಎಂ, ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿ ಯಾವುದೇ ಚರ್ಚೆ ಆಗಿಲ್ಲ. ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಧನಂಜಯ್ ಬಗೆಗಿನ ಸುದ್ದಿಯನ್ನು ಅಲ್ಲಗಳೆದಿದ್ದಾರೆ.
ಕರ್ನಾಟಕ ಸರಕಾರ ಧನಂಜಯ್ ಅವರನ್ನು ಲಿಡ್ಕರ್ ಸಂಸ್ಥೆಗೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಜೊತೆಗೆ ಧನಂಜಯ್ ನಿರ್ಮಾಣದ ಡೇರ್ ಡೆವಿಲ್ ಮುಸ್ತಾಫಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಂಸೆ ವ್ಯಕ್ತ ಪಡಿಸಿದ್ದರು. ಅಲ್ಲದೇ, ಕಾಂಗ್ರೆಸ್ ಮೆಚ್ಚುವಂತಹ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಇವೆಲ್ಲ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷದಿಂದ ಡಾಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು.