ಬೆಂಗಳೂರು: ನಗರದಲ್ಲಿ ಪ್ರಚಾರದ ವೇಳೆ ನಟಿ, ಎಐಸಿಸಿ ವಕ್ತಾರೆ ಖುಷ್ಬೂ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಖುಷ್ಬೂ ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಯ್ಸಳನಗರದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಯುವಕನೊಬ್ಬ ಖುಷ್ಬೂ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಖುಷ್ಬೂ, ತಕ್ಷಣ ತಿರುಗಿ ಯುವಕನ ಕೆನ್ನೆಗೆ ಬಾರಿಸಿದ್ದಾರೆ. ಕೂಡಲೇ ಮಧ್ಯೆ ಬಂದ ಪೊಲೀಸರು ಕೂಡಾ ಯುವಕನಿಗೆ ಹೊಡೆದು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಿಜ್ವಾನ್ ಅರ್ಷದ್ ಅವರು ಮಾತನಾಡಿ, ಈ ಕುರಿತು ನಾನು ಖುಷ್ಬೂ ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಆಗ ಅವರು ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ. ಹೀಗಾಗಿ ಕಪಾಳಕ್ಕೆ ಹೊಡೆದೆ ಎಂದು ಹೇಳಿದ್ದಾರೆ. ಸಾವಿರಾರು ಜನ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಇಂತಹ ಕಿಡಿಗೇಡಿ ಕೃತ್ಯಗಳು ಸಾಮಾನ್ಯವಾಗಿರುತ್ತದೆ. ಆ ಯುವಕ ಯಾರು ಎಂದು ನಮಗೆ ತಿಳಿದಿಲ್ಲ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಪಿ.ಸಿ ಮೋಹನ್ ಕಣಕ್ಕಿಳಿದಿದ್ದಾರೆ.