– ವಿವೇಕ್, ಪಿಎ ಮಹೇಶ್ ವಿರುದ್ಧ ಎಫ್ಐಆರ್
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೇ ಮಧ್ಯೆ ಸೌಜನ್ಯ ತಂದೆ ಪ್ರಭು ಮಾದಪ್ಪ ಅವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪೊಲೀಸರು ತೆಲುಗು ನಟ ವಿವೇಕ್ ಹಾಗೂ ಈತನ ಪಿಎ ಮಹೇಶ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ನಟಿಯ ತಂದೆ ಪ್ರಭು ಮಾದಪ್ಪ ನೀಡಿದ ದೂರಿನ ಆಧಾರದ ಮೇಲೆ ಕುಂಬಳಗೋಡು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಕೇಸ್ ದಾಖಲಾಗಿದೆ. ದೂರಿನನ್ವಯ ವಿವೇಕ್ ನಂ.1 ಆರೋಪಿ ಹಾಗೂ ಮಹೇಶ್ ನಂ.2 ಆರೋಪಿಯಾಗಿದ್ದಾರೆ. ಸದ್ಯ ಆರ್ಆರ್ ಆಸ್ಪತ್ರೆಯ ಶವಾಗಾರದಲ್ಲಿ ನಟಿ ಸೌಜನ್ಯ ಮಾದಪ್ಪ ಮೃತದೇಹವಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ
ನಟಿ ತಂದೆಯ ದೂರಿನಲ್ಲಿ ಏನಿದೆ?
ನಟಿ ಸೌಜನ್ಯ ಮಾದಪ್ಪ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಕಿರುತೆರೆ ನಟ ವಿವೇಕ್ ಹಾಗೂ ಪಿಎ ಮಹೇಶ್ ವಿರುದ್ಧ ತಂದೆ ಪ್ರಭು ಮಾದಪ್ಪ ದೂರು ನೀಡಿದ್ದರು. ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ. ನನ್ನ ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ಒಂದು ವರ್ಷದ ಹಿಂದೆ ಕುಂಬಳಗೋಡು ಬಳಿಯ ಸನ್ವರ್ಥ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದಳು.
ಈ ವೇಳೆ ನನ್ನ ಮಗಳು ಸೌಜನ್ಯಾಳಿಗೆ ವಿವೇಕ್ ಎಂಬುವನ ಪರಿಚಯವಾಗಿತ್ತು. ವಿವೇಕ್ ನನ್ನ ಮಗಳನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಪೀಡಿಸುತ್ತಿದ್ದ. ಈ ವಿಚಾರವನ್ನು ಮಗಳು ಸೌಜನ್ಯ, ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದಳು. ಸೆಪ್ಟೆಂಬರ್ 30ರಂದು ವಿವೇಕ್ ನನ್ನ ಪತ್ನಿ ರೇಣುಕಾಗೆ ಬೆಳಗ್ಗೆ 9ಕ್ಕೆ ಫೋನ್ ಮಾಡಿದ್ದ. ಇದಾದ ಒಂದು ಗಂಟೆ ನಂತರ ನನ್ನ ದೊಡ್ಡ ಮಗಳು ಭಾಗ್ಯಶ್ರೀ ಕರೆಮಾಡಿ, ಸವಿ ಸತ್ತು ಹೋಗಿದ್ದಾಳೆ ಎಂದು ತಿಳಿಸಿದ್ದಾಳೆ. ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ
ನನ್ನ ಮಗಳ ಬಳಿ 6 ಲಕ್ಷ ರೂ. ಹಣವಿತ್ತು. ಎರಡು ದಿನಗಳ ಹಿಂದೆ 1 ಲಕ್ಷ ರೂ.ಗಳನ್ನು ಕಳುಹಿಸಿದ್ದೆ. ನನ್ನ ಮಗಳ ಜೊತೆಯಲ್ಲಿದ್ದ ವಿವೇಕ್ ಹಾಗೂ ಮಹೇಶ್ ಕಿರುಕುಳ ತಾಳಲಾರದೆ ಸೆಪ್ಟೆಂಬರ್ 30ರಂದು 10:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗಾಗಿ ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಕುಂಬಳಗೋಡು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.