ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಾರಿಯ ಚುನಾವಣೆ ಗೆಲ್ಲಲು ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರ ಸಲಹೆ ಮತ್ತು ಆಶೀರ್ವಾದ ಪಡೆಯೋಕೆ ಮುಂದಾದ್ರಾ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯವಲಯದಲ್ಲಿ ಎದ್ದಿದೆ.
ರಾಹುಲ್ ಗಾಂಧಿಯವರು ರಾಜ್ಯದ ಎಲ್ಲಾ ಹಿರಿಯ ನಾಯಕರನ್ನು ಮಾತನಾಡಿಸಿ ಸಮಾಧಾನಪಡಿಸಿ ಅಂತ ತಂಡವೊಂದನ್ನು ರಚಿಸಿದ್ದಾರೆ ಎಂಬ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
ಹಿಂದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದ, ಹಾಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಹೆಗಲಿಗೆ ಹಿರಿಯರನ್ನು ಮಾತನಾಡಿಸಿ ಸಮಾಧಾನಪಡಿಸುವ ಜವಾಬ್ದಾರಿ ಕೊಟ್ಟಿದ್ದಾರೆ. ಟಿಕೆಟ್ ಹಂಚಿಕೆ ಸೇರಿದಂತೆ ಸಾಕಷ್ಟು ವಿಷಯಗಳ ಬಗ್ಗೆಯೂ ಹಿರಿಯರ ಸಲಹೆ ಪಡೆದು ಅದನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ; ಬಿಜೆಪಿ ಹಿಂದುತ್ವ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ – ಜನಾರ್ದನ ಪೂಜಾರಿ ಸದ್ಬಳಕೆಗೆ ಮೆಗಾ ಪ್ಲಾನ್
ಈ ಹಿನ್ನೆಲೆಯಲ್ಲಿ ಜಾಫರ್ ಶರೀಫ್, ಜನಾರ್ದನ ಪೂಜಾರಿ, ಎಂ.ವಿ.ರಾಜಶೇಖರನ್, ಹನುಮಂತಪ್ಪ, ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ರಾಜ್ಯ ಭೇಟಿ ಸಂದರ್ಭದಲ್ಲಿ ಮಾತನಾಡಿಸಲು ಮಧುಸೂದನ್ ಮಿಸ್ತ್ರಿ ಮುಂದಾಗಿದ್ದಾರೆ. ಮಿಸ್ತ್ರಿಗೆ ರಾಜ್ಯದ ಹಿರಿಯ ನಾಯಕರೊಂದಿಗೆ ಆತ್ಮೀಯ ಒಡನಾಟವಿದ್ದು, ಪಕ್ಷದ ಪರವಾಗಿ ಹಿರಿಯರ ಮನವೊಲಿಕೆ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕುದ್ರೋಳಿಯಲ್ಲಿ ಮನಸ್ಸಿನ ನೋವನ್ನು ರಾಹುಲ್ ಬಳಿ ತೋಡಿಕೊಂಡ ಪೂಜಾರಿ!
ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಹಾಗೂ ಹಿರಿಯರ ವಿವಾದಾತ್ಮಕ ಹೇಳಿಕೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಳುವಾಗಬಹುದು. ಆದ್ದರಿಂದ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥರನ್ನೇ ಹಿರಿಯ ನಾಯಕರ ಸಮಾಧಾನಕ್ಕಾಗಿ ಫೀಲ್ಡಿಗಿಳಿಸಲು ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.