ಉಡುಪಿ: ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಸದ್ಯಕ್ಕೆ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಪೇಜಾವರ ಶ್ರೀಗಳ ದರ್ಶನ ಮಾಡಲು ಅಪಾರ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಆದ್ದರಿಂದ ಭಕ್ತರೇ ಪೇಜಾವರ ಶ್ರೀಗಳನ್ನು ನೋಡಲು ಮಠಕ್ಕೆ ಬರಬೇಡಿ ಎಂದು ಕಿರಿಯ ಶ್ರೀಗಳು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿಗಳು ಬೆಂಗ್ಳೂರಿಗೆ ಶಿಫ್ಟ್
ಚಿಕಿತ್ಸೆ ನಡುವೆಯೇ ಭಕ್ತರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ಹೇಳಲಾಗಿತ್ತು. ಆದರೆ ಶ್ರೀಗಳ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರೇ ಶ್ರೀಗಳನ್ನು ನೋಡಲು ಮಠಕ್ಕೆ ಬರಬೇಡಿ. ನಿಮಗಾಗಿ ಒಂದು ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಅಜ್ಜರಕಾಡು ಕ್ರೀಡಾಂಗಣಕ್ಕೆ ಬನ್ನಿ. ಅಲ್ಲಿ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಭಕ್ತರಲ್ಲಿ ಕಿರಿಯ ಶ್ರೀಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಮನವಿ ಮಾಡಿಕೊಂಡಿದ್ದಾರೆ.
ಪೇಜಾವರ ಮಠದಿಂದ ಸುಮಾರು 2 ಕಿ.ಮೀ ದೂರದಲ್ಲಿ ಅಜ್ಜರಕಾಡು ಕ್ರೀಡಾಂಗಣ ಇದೆ. ಈಗಾಗಲೇ ಮೈದಾನದಲ್ಲಿ ಪೊಲೀಸರು ತರಾತುರಿಯಲ್ಲಿ ಪೂರ್ವ ಸಿದ್ಧತೆ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ಪೇಜಾವರ ಶ್ರೀ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಸಾರ್ವಜನಿಕರು ಕೂಡ ಮೈದಾನಕ್ಕೆ ದೌಡಾಯಿಸುತ್ತಿದ್ದಾರೆ. ಇನ್ನೂ ಕೆಲವೇ ಗಂಟೆಯಲ್ಲಿ ಪೇಜಾವರ ಶ್ರೀಗಳನ್ನು ಮೈದಾನಕ್ಕೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.