ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದಾಗಿ ಇಂದು ನಿಗದಿಯಾಗಿದ್ದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾರ್ಯಕ್ರಮ ನಿಮಿತ್ತ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಮಧ್ಯಾಹ್ನ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಬೆಳಗ್ಗಿನಿಂದಲೂ ಸುರಿಯುತ್ತಿರುವ ಮಳೆಯಿಂದಾಗಿ ಹೆಲಿಕಾಪ್ಟರ್ ಪೈಲಟ್ ಹವಾಮಾನ ಸರಿ ಇಲ್ಲದ ಕಾರಣ ಅನುಮತಿಗೆ ನಿರಾಕರಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿಕೆ ಶಿವಕುಮಾರ್, ಸುರಿಯುತ್ತಿರುವ ಮಳೆಯಿಂದಾಗಿ ಪೈಲಟ್ ವಿಜಯಪುರ ಪ್ರಯಾಣಕ್ಕೆ ನಿರಾಕರಿಸಿದ್ದರು. ಹೀಗಾಗಿ ರಸ್ತೆ ಮೂಲಕ ತೆರಳಲು ನಿರ್ಧಾರ ಮಾಡಿದ್ದೇವು, ಆದರೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಾಹನಗಳ ಮುಖಾಂತರ ತಲುಪಲು ತಡವಾಗುತ್ತದೆ. ಈ ಹಿನ್ನೆಲೆಯಲ್ಲಿ ಬಾಗಿನ ಕಾರ್ಯಕ್ರಮವನ್ನು ರದ್ದುಗೊಳಿಸಿ ಇದೇ ಆಗಸ್ಟ್ 15ರಂದು ಕಾರ್ಯಕ್ರಮವನ್ನು ನಡೆಸುವುದಾಗಿ ಹೇಳಿದ್ದಾರೆ.
ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಮಾನ ನಿಲ್ದಾಣದಿಂದ ಬಸವರಾಜ ಹೊರಟ್ಟಿ ಮನೆಗೆ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದ್ದು, ಒಂದು ವಾರದ ಬಳಿಕ ಕಾರ್ಯಕ್ರಮವನ್ನು ನಡೆಸುವುದಾಗಿ ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದ ಏಕಾಏಕಿ ಸಿಎಂ ಕಾರ್ಯಕ್ರಮ ರದ್ದುಗೊಂಡಿದ್ದರಿಂದ, ಆಲಮಟ್ಟಿ ಜಲಾಶಯದಲ್ಲಿ ಮನವಿ ಕೊಡಲು ಬಂದಿದ್ದ ರೈತರು ಅಸಮಾಧಾನ ಹೊರಹಾಕಿ, ಆಕ್ರೋಶ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews