ಬೆಂಗಳೂರು: ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಪಕ್ಷಗಳ ಮುಖಂಡರುಗಳಲ್ಲಿ ಕೈ ಮುಗಿದು ಕೇಳಿಕೊಂಡರು.
ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಹಿತ ಕಾಪಾಡಲು, ನಾವು ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧರಿದ್ದು, ಮಹದಾಯಿಗಾಗಿ ಹೋರಾಟ ಮಾಡಲು ನಾವು ಬದ್ಧರಾಗಿದ್ದೇವೆ. ಈ ಕುರಿತು ಎಲ್ಲಾ ಪಕ್ಷದ ಮುಖಂಡರಿಗೆ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಹಾದಾಯಿಗಾಗಿ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡೋಣ. ಇದರಲ್ಲಿ ರಾಜಕೀಯ ಮಾಡುವುದು ಬೇಡ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಮನಸ್ಸಿನಲ್ಲಿಟ್ಟುಕೊಂಡು ನಾವು ಮುಂದುವರಿಯಬೇಕಾಗಿದೆ. ಒಂದು ತೊಟ್ಟು ನೀರನ್ನು ಉಳಿಸಿಕೊಳ್ಳಲು, ನಾವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿದರು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ
ಮಹದಾಯಿ ವಿಚಾರದಲ್ಲಿ ನ್ಯಾಯಾಧೀಕರಣದ ಐ-ತೀರ್ಪಿನಿಂದಾಗಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಾರದಲ್ಲಿ ಹಿರಿಯ ಅಧಿಕಾರಿಗಳ ತಂಡದ ಜೊತೆ ಮಹಾದಾಯಿಗೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿಗಳೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ. ಬೇರೆ ರಾಜ್ಯದ ನಡೆ ನಮಗೆ ಬೇಡದ ವಿಚಾರವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ಹೋಗುತ್ತೀರಾ ಎಂದು ಪ್ರಶ್ನಿಸಿದಾಗ, ಯಾವುದೇ ಪ್ರತಿಕ್ರಿಯೆ ನೀಡದೇ ಪ್ರಶ್ನೆ ಕೇಳುತ್ತಲೇ ಸ್ಥಳದಿಂದ ತರಾತುರಿಯಲ್ಲಿ ಸಚಿವರು ಹೊರಟು ಹೋಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv