ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಅಲೆಯನ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಸದ್ಯ ವಿವಿ ಆಡಳಿತ ಮಂಡಳಿ ನಡುವಿನ ಕಿತ್ತಾಟ ಬೀದಿಗೆ ಬಂದಿದೆ.
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಅಲೆಯನ್ಸ್ ವಿವಿ ಕುಲಪತಿ ಮಧುಕರ್ ಅಂಗೂರ್ ಬೆಂಬಲಿಗರ ಮೇಲೆ ವಿವಿ ಆಡಳಿತ ಮಂಡಳಿ ಸದಸ್ಯರಾಗಿರುವ ಶೈಲಜಾ ಚಬ್ಬಿ ಪರ ಬೌನ್ಸರ್ ಗಳಿಂದ ಹಲ್ಲೆ ಮಾಡಲಾಗಿದೆ. ವಿವಿಯಲ್ಲಿನ ಪ್ರಮುಖ ಸಮಸ್ಯೆಗೆ ಕಾರಣ ಆಡಳಿತ ಸದಸ್ಯರು ಮತ್ತು ಶೈಲಜಾ ಚಬ್ಬಿ ಅವರ ಅಧಿಕಾರ ದಾಹ ಎಂದು ಆರೋಪಿಸಲಾಗಿದೆ. ಇಬ್ಬರ ನಡುವೆ ಕಳೆದ ಎರಡು ವರ್ಷಗಳಿಂದ ಕಿತ್ತಾಟ ನಡೆಯುತ್ತಿದ್ದು ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಕಷ್ಟಗಳು ಹೆಚ್ಚಾಗಿವೆ.
ಅಲೆಯನ್ಸ್ ವಿವಿ ಕುಲಪತಿಯಾಗಿ ಮಧುಕರ್ ಅಂಗೂರ್ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿವಿ ವಾತಾವರಣ ಪ್ರಶಾಂತವಾಗಿತ್ತು. ಆದರೆ ಶುಕ್ರವಾರ ಮಧುಕರ್ ಸಹೋದರಿ ಶೈಲಜ ಚಬ್ಬಿ ಹಾಗೂ ಸುದೀರ್ ಅಂಗೂರ್ ಅಕ್ರಮವಾಗಿ ವಿವಿ ಅವರಣಕ್ಕೆ ಬೌನ್ಸರ್ ಗಳನ್ನು ಕಳುಹಿಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.
ಇಷ್ಟೆಲ್ಲಾ ಘಟನೆಗಳು ನಡೆಯುತ್ತಿದ್ದರೂ ಪೊಲೀಸರು ಕಂಡು ಕಾಣದಂತೆ ಸುಮ್ಮನಿರುವುದರಿಂದ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ. ಇನ್ನು ವಿವಿ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುತ್ತಿರುವ ಕುರಿತು ಸುದ್ದಿ ಮಾಡಲು ಹೋದ ಮಾಧ್ಯಮ ಪ್ರತಿನಿಧಿಗಳಿಗೂ ಬೆದರಿಕೆ ಹಾಕಿ ಚಿತ್ರೀಕರಣ ಮಾಡದಂತೆ ತಾಕೀತು ಮಾಡಿದ್ದಾರೆ.