ಚಿತ್ರದುರ್ಗ: ನಾವು ಜನಪರವಾದ ಆಡಳಿತ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಅಮಿತ್ ಶಾ ತಂತ್ರಗಾರಿಕೆಯಾಗಲೀ, ಮೋದಿಯ ಮೋಡಿಯಾಗಲೀ ಎಲ್ಲಿಯೂ ನಡೆಯುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಇಂದು ಗ್ರಾಮ ವಿಕಾಸ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರಸ್ ಸರ್ಕಾರ ಇಡೀ ದೇಶದಲ್ಲೇ ಮಾದರಿ ಎಂಬಂತಹ ಆಡಳಿತ ನೀಡಿದ್ದು, ಪ್ರಣಾಳಿಕೆಯಲ್ಲಿ ಹೇಳಿದ್ದ ಮಾತುಗಳನ್ನು ನಾವು ಈಡೇರಿಸಿದ್ದೇವೆ. ಬಿಜೆಪಿಯವರಿಂದ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ ಎಂದರು.
ಸಿಎಂ ಸ್ಥಾನವನ್ನು ದಲಿತರಿಗೆ ಅಥವಾ ಡಿಕೆಶಿಗೆ ಬಿಟ್ಟುಕೊಡಬೇಕು ಎಂಬ ಜನಾರ್ದನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವರು, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಡಿಕೆಶಿ ಎಂಬ ಮಾತನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದರು.