– 2 ಗಂಟೆ ವಿಶ್ರಾಂತಿಗೆ ವೈದ್ಯರ ಸೂಚನೆ; ಬಳಿಕ ದೆಹಲಿಗೆ ತೆರಳುವ ಸಾಧ್ಯತೆ
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಹೋಟೆಲ್ನಲ್ಲೇ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪಕ್ಷದ ಮೂಲಗಳು ʻಪಬ್ಲಿಕ್ ಟಿವಿʼಗೆ ಖಚಿತಪಡಿಸಿವೆ.
ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಅಮಿತ್ ಶಾ ಅವರೊಂದಿಗೆ ಆಗಮಿಸಿರುವ ವೈದ್ಯರ (Doctor) ತಂಡವೇ ಚಿಕಿತ್ಸೆ ನೀಡುತ್ತಿದೆ. ವೈದ್ಯ ಅರುಣ್ ಪ್ರತಾಪ್ ಅವರು ಗೃಹ ಸಚಿವರ ಆರೋಗ್ಯ ವಿಚಾರಣೆ ಹಾಗೂ ವೈದ್ಯಕೀಯ ಆರೈಕೆಯಲ್ಲಿರುವ ವೈದ್ಯರಲ್ಲಿ ಒಬ್ಬರು.
Inauguration of KAHER’s JGMMMC & KLE Hospital & MRC https://t.co/bjBff6VHg1
— Pralhad Joshi (@JoshiPralhad) September 19, 2026
ಖಾಸಗಿ ಹೋಟೆಲ್ಗೆ ಅಧಿಕಾರಿಗಳ ಭೇಟಿ
ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ಗೆ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಭುವನೇಶ ಪಾಟೀಲ್ ಭೇಟಿ ನೀಡಿದ್ದಾರೆ. ಐಜಿಪಿ ಲಾಬುರಾಮ್ ಕೂಡ ಹೋಟೆಲ್ಗೆ ಆಗಮಿಸಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ.
2 ಗಂಟೆ ವಿಶ್ರಾಂತಿಗೆ ವೈದ್ಯರ ಸೂಚನೆ
ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡ ಹಿನ್ನೆಲೆ ಅಮಿತ್ ಶಾ ಅವರುತಂಗಿದ್ದ ಹೋಟೆಲ್ನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಸುಮಾರು ಎರಡು ಗಂಟೆಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಬಳಿಕ ಅಮಿತ್ ಶಾ ಅವರು ಅಲ್ಲಿಂದ ನೇರವಾಗಿ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ
ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿ ನಾಯಕರು ಅವರನ್ನ ಸ್ವಾಗತಿಸಿದ್ದರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿದ್ದರು. ಶನಿವಾರ ಕೆಎಲ್ಇ ಸಂಸ್ಥೆಯ ನೂತನ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವ ಕಾರ್ಯಕ್ರಮ ನಿಗದಿಯಾಗಿತ್ತು.
700 ಕೋಟಿ ವೆಚ್ಚದ ಕಾಲೇಜು ಆಸ್ಪತ್ರೆ ಉದ್ಘಾಟನೆ
ಹುಬ್ಬಳ್ಳಿಯ ಗಬ್ಬೂರು ಭಾಗದಲ್ಲಿ ನಿರ್ಮಿಸಲಾಗಿರುವ ಕೆಎಲ್ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕೆಎಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಅಮಿತ್ ಶಾ ಉದ್ಘಾಟಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ನೂತನ ವೈದ್ಯಕೀಯ ಕ್ಯಾಂಪಸ್ ಸುಮಾರು 50 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಅಂದಾಜು 700 ಕೋಟಿ ರೂ. ವೆಚ್ಚವಾಗಿದೆ. ಆಸ್ಪತ್ರೆಯಲ್ಲಿ 1,200 ಹಾಸಿಗೆಗಳ ವ್ಯವಸ್ಥೆ ಇದೆ. ಅಮಿತ್ ಶಾ ಅವರಿಗೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಮುಂದುವರಿದಿದೆ.

